ರಾಜ್ಯದಲ್ಲಿ ಅಕ್ವಾ ಪಾರ್ಕ್ಗಳ ನಿರ್ಮಾಣಕ್ಕೆ ಕ್ರಮ: ಮಂಕಾಳ ಎಸ್.ವೈದ್ಯ

ಸಚಿವ ಮಂಕಾಳ ಎಸ್.ವೈದ್ಯ
ಬೆಂಗಳೂರು : ರಾಜ್ಯದಲ್ಲಿ ಅಕ್ವಾ ಪಾರ್ಕ್ಗಳ ನಿರ್ಮಾಣ ಮಾಡಲು ಕ್ರಮ ವಹಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್.ವೈದ್ಯ ತಿಳಿಸಿದ್ದಾರೆ.
ಬುಧವಾರ ವಿಧಾನ ಪರಿಷತ್ತಿನ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ಆಯವ್ಯಯದಲ್ಲಿ ಅಕ್ವಾ ಪಾರ್ಕ್ ಸ್ಥಾಪನೆ ಮಾಡಲು ಉದ್ದೇಶಿಸಿದೆ. ಕೇಂದ್ರ ಸರಕಾರಕ್ಕೆ ವಿಸ್ಕೃತ ಯೋಜನಾ ವರದಿ ತಯಾರಿಸಿ ಸಲ್ಲಿಸಲು ಕ್ರಮವಹಿಸಲಾಗುತ್ತಿದೆ ಎಂದರು.
2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 58 ರಲ್ಲಿ ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಸುಸಜ್ಜಿತ ಮೀನುಗಾರಿಕೆ ಹೊರ ಬಂದರು ನಿರ್ಮಾಣ ಮಾಡಲಾಗುವುದೆಂದು ಘೋಷಿಸಲಾಗಿದೆ. ಈ ಯೋಜನೆಯನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಮಂಕಾಳ ಎಸ್. ವೈದ್ಯ ತಿಳಿಸಿದರು.
ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆಗೆ ಹೊನ್ನಾವರ ತಾಲ್ಲೂಕಿನ ಮಂಕಿ/ಕಾಸರಕೋಡದಲ್ಲಿ ಜಾಗದ ಲಭ್ಯತೆ ಇಲ್ಲದ ಕಾರಣ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 9.36 ಎಕರೆ ಜಾಗ ಗುರುತಿಸಿ ಸರ್ವೇ ಕಾರ್ಯ ನಡೆಸಲಾಗಿದ್ದು, ಜಾಗವನ್ನು ಮೀನುಗಾರಿಕೆ ಇಲಾಖೆಗೆ ಹಸ್ತಾಂತರ ಮಾಡಿಕೊಳ್ಳುವ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದು ಮಂಕಾಳ ಎಸ್. ವೈದ್ಯ ಹೇಳಿದರು.
ಕೇಂದ್ರದ ಪಿ.ಎಂ.ಎಂ.ಎಸ್.ವೈ ಯೋಜನೆಯಡಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿ 27 ಕೋಟಿ ರೂ.ಗಳ ಒಟ್ಟು ಯೋಜನಾ ವೆಚ್ಚದಲ್ಲಿ ಸುಸಜ್ಜಿತ ಅತ್ಯಾದುನಿಕ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲು ವಿಸ್ತøತವಾದ ಯೋಜನಾ ವರದಿಯನ್ನು ತಯಾರಿಸಿ ಮಾರುಕಟ್ಟೆ ನಕ್ಷೆಯೊಂದಿಗೆ ಕೇಂದ್ರ ಸರಕಾರದ ಅನುಮೋದನೆಗಾಗಿ ಪ್ರಸ್ತಾವವನ್ನು ಸಲ್ಲಿಸಲಾಗಿದೆ. ಅನುಮೋದನೆ ನಿರೀಕ್ಷೆಯಲ್ಲಿದೆ ಎಂದು ಮಂಕಾಳ ಎಸ್.ವೈದ್ಯ ತಿಳಿಸಿದರು.
ವಿಜಯಪುರದ ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ 10 ಎಕರೆ ಜಾಗದ ಅವಶ್ಯಕತೆ ಇದ್ದು, ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತರವರಿಂದ ಜಾಗ ಹಸ್ತಾಂತರ ಮಾಡಿಕೊಳ್ಳುವ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದು ಮಂಕಾಳ ಎಸ್.ವೈದ್ಯ ತಿಳಿಸಿದರು.