ಹೋರಾಟಗಾರರ ಬಂಧನಕ್ಕೆ ವಾಟಾಳ್ ನಾಗರಾಜ್ ಖಂಡನೆ

ಬೆಂಗಳೂರು: ರಾಜ್ಯದಲ್ಲಿ ಕನ್ನಡ ನಾಮಫಲಕ ಕಡ್ಡಾಯ ವಿಚಾರವಾಗಿ ಹೋರಾಟ ನಡೆಸಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಹಾಗೂ ಕನ್ನಡಪರ ಹೋರಾಟಗಾರರನ್ನು ಬಂಧಿಸಿರುವುದನ್ನು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತೀವ್ರವಾಗಿ ಖಂಡಿಸಿದ್ದಾರೆ.
ಕರವೇ ನಾರಾಯಣಗೌಡ ಬಂಧನವನ್ನು ವಿರೋಧಿಸಿ ಶನಿವಾರ ನಗರದ ಮೈಸೂರು ವೃತ್ತದ ಬಳಿ ಪ್ರತಿಭಟನೆಗೆ ನಡೆಸಲು ಮುಂದಾಗಿದ್ದ ವಾಟಾಳ್ ನಾಗರಾಜ್ ಮತ್ತು ಇತರರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದರು.
ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಕನ್ನಡ ನಾಮಫಲಕ ಕಡ್ಡಾಯ ಮಾಡಬೇಕು. ಕನ್ನಡ ಹೋರಾಟಗಾರರನ್ನು ಬಂಧನದಿಂದ ಬಿಡುಗಡೆ ಮಾಡಬೇಕು. ನಮ್ಮ ಬೇಡಿಕೆಯ ಮನವಿಯನ್ನು ಮುಖ್ಯಮಂತ್ರಿ ಅವರಿಗೆ ನೀಡುತ್ತೇವೆ. ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಬಂದ್ ಮಾಡುತ್ತೇವೆ. ಫೆಬ್ರುವರಿ ಎರಡನೇ ವಾರ ಬಂದ್ ಮಾಡುತ್ತೇವೆ. ಅನ್ಯಭಾಷೆ ಸಿನಿಮಾ ಪ್ರದರ್ಶನ ಬಂದ್ ಮಾಡುತ್ತೇವೆ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
Next Story