ಹುಬ್ಬಳ್ಳಿ ಎನ್ಕೌಂಟರ್ | ಪಿಎಸ್ಐ ಅನ್ನಪೂರ್ಣಗೆ ಅತ್ಯುನ್ನತ ಪದಕಕ್ಕೆ ಶಿಫಾರಸು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ : ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪಿಎಸ್ಐ ಅನ್ನಪೂರ್ಣ ಅವರಿಗೆ ಅತ್ಯುನ್ನತ ಪದಕ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರಿಗೆ ಶಿಫಾರಸು ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಸೋಮವಾರ ಬೆಳಗಾವಿಯಲ್ಲಿ ಮಾತನಾಡಿದ ಸಚಿವರು, ಪಿಎಸ್ಐ ಅನ್ನಪೂರ್ಣ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸುತ್ತೇನೆ. ನಾನು ಓರ್ವ ಸಚಿವೆಯಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ನಾನು ಹಿಂದಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದೇನೆ. ಇಂಥ ಪ್ರಕರಣದ ಆರೋಪಿಗಳಿಗೆ ಗಲ್ಲುಶಿಕ್ಷೆ ಆಗಬೇಕು, ದೌರ್ಜನ್ಯಕ್ಕೆ ಒಳಗಾದವರಿಗೆ ತ್ವರಿತವಾಗಿ ನ್ಯಾಯಸಿಗಬೇಕು. ಅನ್ನಪೂರ್ಣ ಅವರ ಕಾರ್ಯ ಇತರ ಅಧಿಕಾರಿಗಳಿಗೆ ದಾರಿ ದೀಪವಾಗಬೇಕು ಎಂದು ಸಚಿವರು ಹೇಳಿದರು.
ಇಂತಹ ಪಿಡುಗು ನಮ್ಮ ಸಮಾಜದಿಂದ ನಿರ್ಮೂಲನೆ ಆಗಬೇಕು. ಸರಕಾರಿ ನೌಕರರಿಗೆ ನಮ್ಮ ಇಲಾಖೆಯಿಂದ ಕೊಡ ಮಾಡುವ ರಾಣಿ ಚನ್ನಮ್ಮ ಪ್ರಶಸ್ತಿ ನೀಡವುದಿಲ್ಲ. ಒಂದು ವೇಳೆ ಸರಕಾರಿ ನೌಕರರಿಗೆ ಕೊಡಬೇಕು ಅಂತ ಬಂದರೆ ಅನ್ನಪೂರ್ಣ ಅವರ ಹೆಸರು ಮೊದಲಿರುತ್ತದೆ ಎಂದು ಉತ್ತರಿಸಿದರು.
ಇಂಥ ಘಟನೆ ನಡೆದಾಗ ಸರಕಾರ ಸಮರ್ಥವಾಗಿ ನಿಭಾಯಿಸಿದೆ. ಕರ್ನಾಟಕವನ್ನು ಬೇರೆ ರಾಜ್ಯಗಳಿಗೆ ಹೋಲಿಸಲು ನಾನು ಇಷ್ಟಪಡುವುದಿಲ್ಲ. ನಮ್ಮಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ನಮ್ಮನ್ನು ಟೀಕಿಸುವ ಬದಲಿಗೆ ಬಿಜೆಪಿಗರು ಮಣಿಪುರಕ್ಕೆ ಒಮ್ಮೆ ಭೇಟಿ ನೀಡಲಿ, ಪ್ರಧಾನಿ ನರೇಂದ್ರ ಮೋದಿ ಒಮ್ಮೆಯೂ ಅಲ್ಲಿಗೆ ಭೇಟಿ ಕೊಟ್ಟಿಲ್ಲ ಎಂದು ಸಚಿವರು ತಿರುಗೇಟು ನೀಡಿದರು.
ನಿಪ್ಪಾಣಿಯಲ್ಲಿ ಸರಕಾರದಿಂದ ಕಾರ್ಯಕ್ರಮ :
ನಿಪ್ಪಾಣಿಗೆ ಅಂಬೇಡ್ಕರ್ ಭೇಟಿ ನೀಡಿ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಿಜೆಪಿಯವರು ʼಭೀಮ ಹೆಜ್ಜೆʼ ಹೆಸರಿನಲ್ಲಿ ಸಮಾವೇಶ ಮಾಡುತ್ತಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕಾಂಗ್ರೆಸ್ ಪಕ್ಷ ಸಂವಿಧಾನವನ್ನು ಶ್ರದ್ಧಾ, ಭಕ್ತಿಯಿಂದ ನಂಬಿದೆ. ನಿಪ್ಪಾಣಿಯಲ್ಲಿ ಕಾರ್ಯಕ್ರಮ ಆಯೋಜನೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ಆಗಿದ್ದು, ಸರಕಾರದಿಂದ ಕಾರ್ಯಕ್ರಮ ಮಾಡಲಾಗುವುದು ಎಂದರು.
ಜಾತಿ ಗಣತಿಗೆ ವಿರೋಧವಿಲ್ಲ :
ಜಾತಿ ಗಣತಿ ಬಿಡುಗಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಜಾತಿ ಗಣತಿಗೆ ನಮ್ಮ ವಿರೋಧ ಯಾವತ್ತೂ ಇಲ್ಲ. ವೀರಶೈವ- ಲಿಂಗಾಯತರನ್ನು ಪ್ರತ್ಯೇಕ ಮಾಡಿ ಗಣತಿ ಮಾಡಲಾಗಿದೆ. ಅದನ್ನು ಸರಿಪಡಿಸಿ ಇನ್ನೊಮ್ಮೆ ಗಣತಿಯನ್ನು ಮಾಡಬೇಕು. ಎಲ್ಲಾ ಜಾತಿಯಲ್ಲಿ ಜನರು ಹೆಚ್ಚಾಗಿದ್ದಾರೆ. ಅದರಂತೆ ನಮ್ಮ ವೀರಶೈವ, ಲಿಂಗಾಯತರಲ್ಲಿಯೂ ಜನ ಹೆಚ್ಚಾಗಿದ್ದಾರೆ. ಹೀಗಾಗಿ ವೀರಶೈವ- ಲಿಂಗಾಯತರು ಒಡೆದು ಹೋಗಿದ್ದು ಅಂಕಿ ಅಂಶ ಕಡಿಮೆ ಕಾಣಿಸುತ್ತಿದೆ ಎಂದು ಹೇಳಿದರು.