ಪ್ರತಿಭಾನ್ವಿತ ಮಕ್ಕಳನ್ನು ಪ್ರೋತ್ಸಾಹಿಸಿ ಮುಖ್ಯ ವಾಹಿನಿಗೆ ತರುವ ಕೆಲಸವಾಗಬೇಕು : ಸಂಸದ ಸಾಗರ್ ಖಂಡ್ರೆ

ಬೀದರ್ : ಪ್ರತಿಭಾನ್ವಿತ ಮಕ್ಕಳನ್ನು ಪ್ರೋತ್ಸಾಹಿಸಿ ಅವರನ್ನು ಮುಖ್ಯ ವಾಹಿನಿಗೆ ತರುವ ಕೆಲಸವಾಗಬೇಕು ಎಂದು ಸಂಸದ ಸಾಗರ್ ಖಂಡ್ರೆ ಅಭಿಪ್ರಾಯಪಟ್ಟರು.
ಭಾಲ್ಕಿಯ ಸತ್ಯಸಾಯಿ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದಿಂದ ಎಲ್ಲವೂ ಸಾಧ್ಯವಿದೆ. ಹೀಗಾಗಿ ಶಾಲಾ ಪರಿಸರದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗುರುತಿಸುವ ಮೂಲಕ ಅವರನ್ನು ಪ್ರೋತ್ಸಾಹಿಸಿ ಮುಖ್ಯ ವಾಹಿನಿಗೆ ತರುವ ಕೆಲಸ ಶಿಕ್ಷಕರದ್ದಾಗಿರುತ್ತದೆ. ಹೀಗಾಗಿ ಶಿಕ್ಷಕರು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಅವರನ್ನು ಪ್ರೊತ್ಸಾಹಿಸಬೇಕು ಎಂದರು.
ಈ ಭಾಗದ ವಿದ್ಯಾರ್ಥಿಗಳು ತುಂಬಾ ಪ್ರತಿಭಾವಂತರಾಗಿದ್ದಾರೆ. ಅವರಿಗೆ ಉತ್ತಮ ಮಾರ್ಗದರ್ಶನದ ಅವಶ್ಯಕತೆ ಇದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ಮಾಡಿ, ಅವರು ಯಶಸ್ಸು ಕಂಡುಕೊಳ್ಳುವಂತೆ ಮಾಡಬೇಕು ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ್ ಅವರು ಮಾತನಾಡಿ, ಶಿಕ್ಷಕರು ನಿರಂತರ ಅಭ್ಯಾಸ ಮಾಡಬೇಕು. ಮಕ್ಕಳ ಮನಸ್ಸನ್ನು ಅರಿತು ಪಾಠ ಮಾಡಬೇಕು. ಎಸೆಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಬೇಕು. ಉತ್ತಮ ರೀತಿಯಿಂದ ಅಭ್ಯಾಸ ಮಾಡಿ ಪರೀಕ್ಷೆ ಎದುರಿಸಿ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಡಿವೈಎಸ್ಪಿ ಶಿವಾನಂದ್ ಪವಾಡಶೆಟ್ಟಿ, ಸತ್ಯಸಾಯಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಚಂದ್ರಶೇಖರ್ ಎಮ್ಮೆ, ಪ್ರಾಂಶುಪಾಲೆ ನಿರ್ಮಲಾ ತಿವಾರಿ, ಜ್ಯೋತಿ ಎಮ್ಮೆ, ಡಾ.ಮಲ್ಲಿಕಾರ್ಜುನ್ ಎಮ್ಮೆ, ಮಲ್ಲಿಕಾರ್ಜುನ್ ಕನ್ನಾಳೆ, ಸಹದೇವ್ ಗೌಡಗಾವೆ, ಸಿಆರ್ಪಿ ಅಂಬರೀಶ್ ಖಂಡ್ರೆ ಹಾಗೂ ರಾಜಗುರು ಮಹಾಗಾವೆ ಸೇರಿದಂತೆ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.