ಜ.24ಕ್ಕೆ ಸಂವಿಧಾನ ಸನ್ಮಾನ, ಪುಸ್ತಕ ಲೋಕಾರ್ಪಣೆ: ಅವ್ವಣ್ಣ ಮ್ಯಾಕೇರಿ

ಕಲಬುರಗಿ: ಜನರಿಗೆ ಸಂವಿಧಾನದ ಕುರಿತು ಜಾಗೃತಿ ಮೂಡಿಸಲು ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ವತಿಯಿಂದ ಇದೇ ಜನವರಿ 24 ರಂದು ಬೆಳಗ್ಗೆ 10:30ಕ್ಕೆ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಸಮಿತಿಯ ಮುಖಂಡ ಅವ್ವಣ್ಣ ಮ್ಯಾಕೇರಿ ಹೇಳಿದರು.
ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತ ಸಂವಿಧಾನ ಸಮರ್ಪಣೆಯ 75ನೇ ವರ್ಷದ ಅಮೃತ ಮಹೋತ್ಸವ ಪ್ರಯುಕ್ತ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ರಾಜ್ಯಸಭಾ ಸದಸ್ಯ ಮತ್ತು ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಡಾ.ಕೆ.ಲಕ್ಷ್ಮಣ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಸಂವಿಧಾನ ಕುರಿತ ಪುಸ್ತಕವನ್ನು ಬಿಡುಗಡೆಗೊಳಿಸಿದರು ಎಂದರು.
ಮುಖ್ಯ ಅತಿಥಿಗಳಾಗಿ ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಪಾಲ್ಗೊಳ್ಳಲಿದ್ದಾರೆ. ಸಂಘಟನೆಯ ಮುಖ್ಯಸ್ಥ ವಾದಿರಾಜ ವಿಚಾರಗಳನ್ನು ಮಂಡಿಸುವರು, ಈ ಸಮಾರಂಭಕ್ಕೆ ಹೆಚ್ಚಿನ ಜನರು ಆಗಮಿಸಿ, ಕಾರ್ಯಕ್ರಮವನ್ನು ಯಶ್ವಸಿಗೊಳಿಸಬೇಕೆಂದು ಮನವಿ ಮಾಡಿದರು.
ಮಲ್ಲಿಕಾರ್ಜುನ ಜಿನಕೇರಿ ಮಾತನಾಡಿ, ವಿಜಯಪುರದದಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ಮೂವರು ಕಾರ್ಮಿಕರನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಅಮಾನವೀಯ. ಸರ್ಕಾರದಿಂದ ಒಳ್ಳೆಯ ಚಿಕಿತ್ಸೆ ನೀಡಿ ಸಹಾಯಕ್ಕೆ ಮುಂದಾಗಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಅಂಬಾರಾಯ ಅಷ್ಟಗಿ, ಶರಣಪ್ಪ ತಳವಾರ, ಗುರು ನರಿಬೋಳ, ಮಲ್ಲಿಕಾರ್ಜುನ ಎಮ್ಮೆನೋರ, ಸಂತೋಷ ಹಾದಿಮನಿ, ಮಲ್ಲಿಕಾರ್ಜುನ ಕುಕನೂರು ಸೇರಿದಂತೆ ಮತ್ತಿತರರು ಇದ್ದರು.