ಉತ್ತರಾಖಂಡದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ

Photo credit: PTI
ಡೆಹ್ರಾಡೂನ್: ಸೋಮವಾರ ಉತ್ತರಾಖಂಡದಲ್ಲಿ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಲಾಗಿದ್ದು, 2022ರ ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ನೀಡಲಾಗಿದ್ದ ಭರವಸೆಯನ್ನು ಪೂರೈಸಲಾಗಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಧಾಮಿ ಸಿಂಗ್ ಹೇಳಿದ್ದಾರೆ.
ಸಮಾನ ನಾಗರಿಕ ಸಂಹಿತೆಯ ಅಧಿಸೂಚನೆಯನ್ನು ಬಹಿರಂಗಗೊಳಿಸಿದ ಪುಷ್ಕರ್ ಸಿಂಗ್ ಧಾಮಿ ಅದರೊಂದಿಗೆ, ನಿಯಮಗಳನ್ನೂ ಬಿಡುಗಡೆಗೊಳಿಸಿದರು. ಅಲ್ಲದೆ ಸಮಾನ ನಾಗರಿಕ ಸಂಹಿತೆಯ ಜಾರಿಯ ಭಾಗವಾಗಿ ಪೋರ್ಟಲ್ ಒಂದಕ್ಕೂ ಚಾಲನೆ ನೀಡಿದರು.
“2022ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಾವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಭರವಸೆಯನ್ನು ಜನತೆಗೆ ನೀಡಿದ್ದೆವು. ಅದರಂತೆ, ಜನವರಿ 27ರಿಂದ ಉತ್ತರಾಖಂಡದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸಲಾಗುತ್ತಿದ್ದು, ಇಡೀ ದೇಶದಲ್ಲಿ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಿದ ಪ್ರಪ್ರಥಮ ರಾಜ್ಯ ಉತ್ತರಾಖಂಡವಾಗಲಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘೋಷಿಸಿದ್ದಾರೆ. ಈ ಕಾನೂನಿನ ಜಾರಿಯೊಂದಿಗೆ ಸಮಾಜದಲ್ಲಿ ಎಲ್ಲ ನಾಗರಿಕರಿಗೆ ಸಮಾನ ಹಕ್ಕುಗಳು ಹಾಗೂ ಹೊಣೆಗಾರಿಕೆಗಳು ಖಾತರಿಯಾಗಲಿವೆ” ಎಂದು ಅವರು ರವಿವಾರ ಪ್ರಕಟಣೆಯಲ್ಲಿ ತಿಳಿಸಿದ್ದರು.
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದ ಪುಷ್ಕರ್ ಸಿಂಗ್ ಧಾಮಿ, ಕಾಯ್ದೆಯ ನಿಯಮಗಳ ಅನುಷ್ಠಾನಕ್ಕೆ ಅನುಮೋದನೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ತರಬೇತಿ ಸೇರಿದಂತೆ ಎಲ್ಲ ಸಿದ್ಧತೆಗಳನ್ನೂ ಪೂರ್ಣಗೊಳಿಸಲಾಗಿದೆ ಎಂದು ಹೇಳಿದ್ದರು.
ರಾಷ್ಟ್ರಪತಿಗಳ ಅಂಕಿತದ ನಂತರ ಮಾರ್ಚ್ 12, 2024ರಲ್ಲಿ ಸಮಾನ ನಾಗರಿಕ ಕಾಯ್ದೆಯ ಅಧಿಸೂಚನೆಯನ್ನು ಹೊರಡಿಸಲಾಗಿತ್ತು.