ಅಂಬೇಡ್ಕರ್ ಅವರು ನೊಂದ ಸಮುದಾಯದ ಧ್ವನಿಯಾಗಿದ್ದರು : ಸಂಸದ ಜಿ.ಕುಮಾರನಾಯಕ

ರಾಯಚೂರು : ಡಾ.ಬಿ.ಆರ್.ಅಂಬೇಡ್ಕರ್ ಅವರು ಅಸ್ಪೃಶ್ಯತೆ ನಿವಾರಣೆಗಾಗಿ ಹೋರಾಡಿದ ಮಹಾನ್ ಮಾನವತಾವಾದಿ. ಸಮ ಸಮಾಜದ ಕಲ್ಪನೆ ಸಾಕಾರಗೊಳ್ಳಬೇಕಾದರೆ ನಾವೆಲ್ಲ ಅವರ ಆದರ್ಶಗಳನ್ನು ಪಾಲಿಸಬೇಕು ಎಂದು ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ ಅವರು ಹೇಳಿದರು.
ಎ.14ರ ಸೋಮವಾರ ದಂದು ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್ ರವರ 134ನೇ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಅಂಬೇಡ್ಕರ್ ಶೋಷಿತ ಸಮುದಾಯದ ಧ್ವನಿಯಾಗಿದ್ದರು. ಅವರ ಏಳಿಗೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು. ಅವರ ಕೆಲಸಗಳು ನಮ್ಮೆಲ್ಲರಿಗೂ ಆದರ್ಶ. ನಾವೆಲ್ಲ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಭಾವನೆಗಳನ್ನು ಎತ್ತಿಹಿಡಿಯಬೇಕು. ಜೊತೆಗೆ ಅವುಗಳನ್ನು ಮೈಗೂಡಿಸಿಕೊಳ್ಳಬೇಕು. ಹಾಗಾದಾಗ ಮಾತ್ರ ಅಂಬೇಡ್ಕರ್ ಕಂಡ ಪ್ರಜಾಪ್ರಭುತ್ವದ ಕನಸು ನನಸಾಗಿಸಲು ಸಾಧ್ಯ ಎಂದರು.
ಅಂಬೇಡ್ಕರ್ ಅವರ ಜಯಂತಿ ಆಚರಣೆಯನ್ನು ಇಡೀ ಜಗತ್ತು ಆಚರಣೆ ಮಾಡುತ್ತಿದ್ದು, ಇದೊಂದು ಹಬ್ಬದ ದಿನವಾಗಿದೆ. ಅಂಬೇಡ್ಕರ್ ಅವರ ಸಂವಿಧಾನದ ಬಲದಿಂದಲೇ ನಾವಿಂದು ಅಧಿಕಾರದಲ್ಲಿದ್ದೇವೆ. ದೇಶದಲ್ಲಿ ಪ್ರತಿಯೊಬ್ಬರಿಗೂ ಅವಕಾಶಗಳು ಸಿಗಬೇಕು. ಅಭಿವೃದ್ಧಿ ಹೊಂದಲು ಬೇಕಾದ ಮಾರ್ಗದರ್ಶನ ಪ್ರತಿಯೊಬ್ಬರಿಗೂ ಸಿಗಬೇಕೆಂಬ ಆಶಯವನ್ನು ಅಂಬೇಡ್ಕರ್ ಅವರು ಹೊಂದಿದ್ದರು. ಅವರ ಆಶಯಗಳನ್ನು ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಮಾತನಾಡಿ, ಭಾರತದ ಪ್ರಜೆಗಳ ಮೇಲೆ ಅತ್ಯಂತ ಹೆಚ್ಚಿನ ಪ್ರಭಾವ ಬೀರಿದ ಶ್ರೇಷ್ಠ ವ್ಯಕ್ತಿ ಅಂಬೇಡ್ಕರ್ ಆಗಿದ್ದಾರೆ. ಅಂಬೇಡ್ಕರ್ ಅವರು ದೂರ ದೃಷ್ಠಿಕೋನದಿಂದ ಸಂವಿಧಾನ ರಚಿಸಿದ್ದಾರೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಅವರು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಎಲ್ಲಾ ಕ್ಷೇತ್ರದಲ್ಲಿಯೂ ಪರಿಣಿತರಾಗಿದ್ದರು. ಬೇರೆ ಬೇರೆ ದೇಶಗಳ ಸಂವಿಧಾನ ಅಧ್ಯಯನ ಮಾಡಿದರು. ಪ್ರತಿಯೊಬ್ಬರಿಗೂ ಸಮಾನತೆ ಸಿಗಲಿ ಎಂದು ಉತ್ತಮವಾದ ಸಂವಿಧಾನ ನೀಡಿದ್ದಾರೆ ಎಂದು ಹೇಳಿದರು.
ಈ ವೇಳೆ ಉಪನ್ಯಾಸಕರಾಗಿ ಆದಿಕವಿ ವಾಲ್ಮೀಕಿ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಉಪನ್ಯಾಸಕರಾದ ಡಾ.ಶರಣಪ್ಪ ಅವರು ಮಾತನಾಡಿ, ಅಂಬೇಡ್ಕರ್ ಅವರ ಜಯಂತಿ ದಿನವು ಇಡೀ ಜಗತ್ತು ಸಂಭ್ರಮಿಸುವ ದಿನವಾಗಿದೆ. ಮಹಾರಾಷ್ಟ್ರದ ಹಳ್ಳಿಯೊಂದರಲ್ಲಿ ಜನಿಸಿ ಇಡೀ ದೇಶದ ಜನರು ಉತ್ತಮವಾಗಿ ಬದುಕನ್ನು ನಡೆಸಲು ಶ್ರೇಷ್ಠ ಗ್ರಂಥವನ್ನು ನೀಡಿದ ಮಹಾನ್ ನಾಯಕ ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಪಾಲಿಸುವುದು ಅತ್ಯವಶ್ಯಕವಾಗಿದೆ ಎಂದು ತಿಳಿಸಿದರು.
ವಿವಿಧ ಗಣ್ಯರಿಂದ ಮಾಲಾರ್ಪಣೆ :
ಇದಕ್ಕೂ ಮುಂಚೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್ ಹತ್ತಿರವಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎಸ್.ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ್, ರಾಯಚೂರು ಮಹಾನಗರ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚಿದಾನಂದಪ್ಪ ಸೇರಿದಂತೆ ಇತರೆ ಗಣ್ಯ ವ್ಯಕ್ತಿಗಳಿಂದ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಹಾಪೌರರಾದ ನರಸಮ್ಮ ನರಸಿಂಹಲು ಮಾಡಗಿರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚಿದಾನಂದಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜೇಂದ್ರ ಜಲ್ದಾರ್, ರಾಯಚೂರು ತಾಲೂಕು ಪಂಚಾಯತ್ ಇಒ ಚಂದ್ರಶೇಖರ ಪವಾರ್, ಸಮಾಜ ಕಲ್ಯಾಣ ಇಲಾಖೆಯ ವಿಜಯಲಕ್ಷೀ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಂಗಮೇಶ್ವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.