ಲಿಂಗಸೂಗೂರು ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ರಾಯಚೂರು: ಲಿಂಗಸೂಗೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ನಿತೀಶ್ ಕೆ. ಬುಧವಾರ ಭೇಟಿ ನೀಡಿದರು.
ದಿಢೀರ್ ಭೇಟಿ ವೇಳೆ ಜಿಲ್ಲಾಧಿಕಾರಿ, ಆಸ್ಪತ್ರೆಯ ಪ್ರತಿಯೊಂದು ವಾರ್ಡಗಳಿಗೆ ತೆರಳಿ ಪರಿಶೀಲನೆ ನಡೆಸಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಜತೆ ಮಾತನಾಡಿದರು.
ನಂತರ ಆಸ್ಪತ್ರೆ ಲ್ಯಾಬ್ ಹಾಗೂ ಡಯಾಲಿಸಿಸ್ ಸೆಂಟರ್ಗೆ ತೆರಳಿದ ಅವರು, ಸೆಂಟರ್ ನಲ್ಲಿದ್ದ ಸಿಬ್ಬಂದಿ ಜೊತೆ ಮಾತನಾಡಿ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡಬೇಕು. ಸರ್ಕಾರಿ ಆಸ್ಪತ್ರೆಗೆ ಹೆಚ್ಚಾಗಿ ಬಡ ವರ್ಗದ ಜನರೇ ಬರುತ್ತಾರೆ. ಅವರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಸಕಾಲಕ್ಕೆ ಗುಣಮಟ್ಟದ ಚಿಕಿತ್ಸೆ ನೀಡಬೇಕೆಂದು ಸೂಚಿಸಿದರು.
ನಂತರ ಮಹಿಳೆಯರ ವಾರ್ಡಗಳಲ್ಲಿದ್ದ ಬಾಣಂತಿಯರ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯಲ್ಲಿ ಸರಿಯಾದ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಸಿಗುತ್ತಿದೇಯೇ ಎಂದು ಕೇಳಿ ಮಾಹಿತಿ ಪಡೆದರು. ನಂತರ ಲ್ಯಾಬ್ ವೀಕ್ಷಣೆ ಮಾಡಿ ಅಲ್ಲಿನ ಸಿಬ್ಬಂದಿಯಿಂದ ಕೆಲ ಮಾಹಿತಿ ಪಡೆದರು. ಆಸ್ಪತ್ರೆಯ ಔಷಧಿ ಸಂಗ್ರಹ ಕೊಠಡಿಗೆ ಭೇಟಿ ನೀಡಿ ಔಷಧಿಗಳನ್ನು ಪರಿಶೀಲಿಸಿದರು. ನಂತರ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ಕಟ್ಟಡದ ಕಾಮಗಾರಿ ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ.ಸುರೇಂದ್ರ ಬಾಬು, ತಾಲೂಕು ಆರೋಗ್ಯಾಧಿಕಾರಿ ಡಾ.ಅಮರೇಶ್ ಪಾಟೀಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವುಕುಮಾರ್, ಸಮುದಾಯ ಆರೋಗ್ಯ ಅಧಿಕಾರಿ ರುದ್ರಗೌಡ ಸೇರಿದಂತೆ ಲಿಂಗಸೂಗೂರು ಪಟ್ಟಣದ ಸಾರ್ವಜನಿಕ ಆಸ್ಪತೆಯ ವಿವಿಧ ವಿಭಾಗದ ಮುಖ್ಯಸ್ಥರು ಇದ್ದರು.