ಭಾರತ-ಇಂಗ್ಲೆಂಡ್ ದ್ವಿತೀಯ ಏಕದಿನ ಪಂದ್ಯ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್

Photo credit:X/BCCI
ಕಟಕ್: ಇಲ್ಲಿನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್, ಮತ್ತೊಮ್ಮೆ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಗುರುವಾರ ನಾಗಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆದಿದ್ದ ಪ್ರಥಮ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಇಂಗ್ಲೆಂಡ್ ತಂಡ, 4 ವಿಕೆಟ್ ಗಳಿಂದ ಪರಾಭವಗೊಂಡಿತ್ತು. ಈ ಪಂದ್ಯದಲ್ಲಿ ಸಂಘಟಿತ ಪ್ರದರ್ಶನ ನೀಡಿದ್ದ ಭಾರತ ತಂಡ, ಸುಲಭ ಗೆಲುವು ದಾಖಲಿಸುವ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆಯಲ್ಲಿದೆ.
ಸರಣಿಯನ್ನು ಜೀವಂತವಾಗಿ ಉಳಿಸಲು ಈ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಾದ ಒತ್ತಡದಲ್ಲಿ ಇಂಗ್ಲೆಂಡ್ ತಂಡವಿದೆ. ಮತ್ತೊಂದೆಡೆ, ಪ್ರಥಮ ಏಕದಿನ ಪಂದ್ಯದಲ್ಲಿ ಗಳಿಸಿದ ಸುಲಭ ಗೆಲುವಿನಿಂದ ಬೀಗುತ್ತಿರುವ ಭಾರತ ತಂಡ, ಸರಣಿ ಕೈವಶ ಮಾಡಿಕೊಳ್ಳುವತ್ತ ಕಣ್ಣು ನೆಟ್ಟಿದೆ.
ಭಾರತ ತಂಡದಲ್ಲಿ ಒಂದು ಬದಲಾವಣೆಯಾಗಿದ್ದು, ಪ್ರಥಮ ಪಂದ್ಯದಲ್ಲಿ ಬ್ಯಾಟಿಂಗ್ ನಲ್ಲಿ ವಿಫಲಗೊಂಡಿದ್ದ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಬದಲಿಗೆ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ್ದಾರೆ. ಮೊಣಕಾಲು ಊತದಿಂದ ವಿರಾಟ್ ಕೊಹ್ಲಿ ಪ್ರಥಮ ಪಂದ್ಯದಿಂದ ಹೊರಗುಳಿದಿದ್ದರು.
ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯ ತಂಡಗಳ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಳಪೆ ಪ್ರದರ್ಶನ ತೋರಿದ್ದ ವಿರಾಟ್ ಕೊಹ್ಲಿ, ಇಂಗ್ಲೆಂಡ್ ತಂಡದ ವಿರುದ್ಧದ ಈ ಏಕದಿನ ಸರಣಿಯಲ್ಲಿ ಬ್ಯಾಟಿಂಗ್ ಲಯಕ್ಕೆ ಮರಳಬೇಕಾದ ಒತ್ತಡದಲ್ಲಿದ್ದಾರೆ.