ನಾಳೆಯಿಂದ ವಿಧಾನ ಮಂಡಲ ಅಧಿವೇಶನ | ಆಡಳಿತ-ಪ್ರತಿಪಕ್ಷಗಳ ನಡುವಿನ ವಾಗ್ಯುದ್ದಕ್ಕೆ ವೇದಿಕೆ ಸಜ್ಜು
ಮಾ.7ಕ್ಕೆ ಬಜೆಟ್ ಮಂಡನೆ

ಬೆಂಗಳೂರು : ವಿಧಾನ ಮಂಡಲ ಜಂಟಿ ಅಧಿವೇಶನ ನಾಳೆ(ಮಾ.3)ಯಿಂದ ವಿದ್ಯುಕ್ತವಾಗಿ ಆರಂಭವಾಗಲಿದ್ದು, ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರುಗಳ ನಡುವಿನ ವಾಗ್ಯುದ್ದಕ್ಕೆ ವೇದಿಕೆ ಸನ್ನದ್ಧವಾಗಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಸಭಾಂಗಣದಲ್ಲಿ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷದ ನೇತೃತ್ವದ ಸರಕಾರದ ಕಾರ್ಯವೈಖರಿ ಹಾಗೂ ಭವಿಷ್ಯದ ಮುನ್ನೋಟವನ್ನು ತಿಳಿಸುವ ಸಾಧ್ಯತೆಗಳಿವೆ.
ರಾಜ್ಯಪಾಲರನ್ನು ಬೀಳ್ಕೊಟ್ಟ ನಂತರ ಉಭಯ ಸದನಗಳು ಪ್ರತ್ಯೇಕವಾಗಿ ಸಮಾವೇಶಗೊಳ್ಳಲಿವೆ. ಎರಡೂ ಸದನದಲ್ಲಿ ಇತ್ತೀಚೆಗೆ ಆಗಲಿದ ಗಣ್ಯರಿಗೆ ಸಂತಾಪ ಸೂಚನೆ ಸಲ್ಲಿಸಲಾಗುತ್ತದೆ. ಮಾ.4ರಿಂದ ಮಾ.6ರ ವರೆಗೆ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಚರ್ಚೆ ನಡೆಯಲಿದೆ. ಈ ವೇಳೆ ಆಡಳಿತ-ಪ್ರತಿಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳು ನಡೆಯುವ ನಿರೀಕ್ಷೆ ಇದೆ.
ಈಗಾಗಲೇ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಪ್ರಸ್ತಾಪಿಸಿರುವಂತೆ ಸಾಲ ನೀಡುವ ನೆಪದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳ ಕಿರುಕುಳ, ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸರಣಿ ಸಾವು, ಕಾನೂನು ಮತ್ತು ಸುವ್ಯವಸ್ಥೆ ವಿಚಾರ, ನಮ್ಮ ಮೆಟ್ರೋ ರೈಲು ಪ್ರಯಾಣ ದರ ಏರಿಕೆ ಸೇರಿದಂತೆ ಇನ್ನಿತರ ವಿಚಾರಗಳನ್ನು ಪ್ರಸ್ತಾಪಿಸಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸನ್ನದ್ದವಾಗಿವೆ.
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟದ ಘಟನೆ, ಬೆಳಗಾವಿಯಲ್ಲಿ ಕನ್ನಡ ಮಾತನಾಡಿದ ನಿರ್ವಾಹಕನ ಮೇಲೆ ಹಲ್ಲೆ, ಮಸಿ ಬಳಿದಿರುವ ಪ್ರಕರಣ ಸದನದಲ್ಲಿ ಪ್ರತಿಧ್ವನಿಸುವ ಸಾಧ್ಯತೆಗಳಿವೆ. ಜತೆಗೆ ಬಿಬಿಎಂಪಿ ವಿಭಜಿಸಿ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ರಚನೆ ಮಾಡುವುದು, ಬಿಬಿಎಂಪಿಯನ್ನು ವಿಭಜಿಸಲು ಶಾಸಕ ರಿಝ್ವಾನ್ ಅರ್ಶದ್ ನೇತೃತ್ವದ ಜಂಟಿ ಪರಿಶೀಲನಾ ಸಮಿತಿ ನೀಡಿರುವ ವರದಿಯೂ ಚರ್ಚೆಗೆ ಬರಲಿದೆ ಎಂದು ಹೇಳಲಾಗುತ್ತಿದೆ.
ವಿಪಕ್ಷಗಳ ಜಂಟಿ ಹೋರಾಟ: ಇತ್ತೀಚೆಗೆ ಬಿಜೆಪಿ-ಜೆಡಿಎಸ್ ನಾಯಕರು ಸಮನ್ವಯ ಸಮಿತಿ ಸಭೆ ನಡೆಸಿದ್ದು, ಸದನದಲ್ಲಿ ಒಗ್ಗಟ್ಟಿನ ಹೋರಾಟ ನಡೆಸಲು ನಿರ್ಧರಿಸಿದ್ದಾರೆ. ಕೆಪಿಎಸ್ಸಿ ಪರೀಕ್ಷಾ ಗೊಂದಲ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಕೊರತೆ ಆರೋಪ, ಬೇಸಿಗೆಯಲ್ಲಿ ಉಂಟಾಗಲಿರುವ ಕುಡಿಯುವ ನೀರಿನ ಸಮಸ್ಯೆ, ಲೋಡ್ ಶೆಡ್ಡಿಂಗ್ ಸಮಸ್ಯೆ ಸೇರಿದಂತೆ ಇನ್ನಿತರ ವಿಚಾರಗಳು ಪ್ರಸ್ತಾಪಗೊಳ್ಳಲಿವೆ ಎಂದು ತಿಳಿದು ಬಂದಿದೆ.
ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಟಾನದ ಉಮೇದಿನಲ್ಲಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸದಸ್ಯರು, ಅತ್ಯಂತ ಪ್ರಬಲವಾಗಿ ವಿಪಕ್ಷಗಳ ಸದಸ್ಯರ ಆರೋಪಗಳಿಗೆ ಪ್ರತಿಕ್ರಿಯೆ ನೀಡಲು ತಯಾರಿ ನಡೆಸಿದ್ದಾರೆ. ಈ ಹಿಂದೆ ಬಿಜೆಪಿ-ಜೆಡಿಎಸ್ ಅಧಿಕಾರದಲ್ಲಿದ್ದ ಅವಧಿಯಲ್ಲಿನ ವೈಫಲ್ಯಗಳನ್ನು ಉಲ್ಲೇಖಿಸಲು ಸಕನ ಸಿದ್ಧತೆ ಮಾಡಿಕೊಂಡಿದ್ದು, ಗದ್ದಲಕ್ಕೂ ಕಾರಣವಾಗಲಿದೆ.
ಆಯವ್ಯಯ ಮಂಡನೆ: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.7ಕ್ಕೆ 2025-26ನೇ ಸಾಲಿನ ಆಯವ್ಯಯ ಮಂಡನೆ ಮಾಡಲಿದ್ದು, ಮಾ.10ರಿಂದ ಬಜೆಟ್ ಮೇಲಿನ ಚರ್ಚೆ ನಡೆಯಲಿದೆ. ಇಲಾಖೆವಾರು ಬೇಡಿಕೆಗಳ ಮೇಲೆ ಚರ್ಚೆ ನಡೆಯಲಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ಶಾಸಕರು ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ.
ಅಧಿವೇಶನ ಆರಂಭದ ಬಳಿಕ ಸ್ಪೀಕರ್ ಅಧ್ಯಕ್ಷತೆಯಲ್ಲಿ ಸಿಎಂ, ವಿಪಕ್ಷ ನಾಯಕರ ಉಪಸ್ಥಿತಿಯಲ್ಲಿ ಕಲಾಪ ಸಲಹಾ ಸಮಿತಿ(ಬಿಎಸ್ಸಿ) ಸಭೆ ನಡೆಯಲಿದೆ. ಆ ನಂತರ ಪ್ರಶ್ನೋತ್ತರ ಕಲಾಪವೂ ಸೇರಿದಂತೆ ಇನ್ನಿತರ ವಿಚಾರಗಳು ಚರ್ಚೆಗೆ ಸಮಯ ನಿಗದಿಯಾಗಲಿದೆ. ನಾಳೆಯಿಂದ ಮಾ.21ರ ವರೆಗೆ ಒಟ್ಟು 14 ದಿನಗಳ ಕಾಲ ಅಧಿವೇಶನ ಕಾರ್ಯಕಲಾಪಗಳು ಜರುಗಲಿವೆ.