ದಲಿತ ನಿಂದನೆ ಆರೋಪ; ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಸಹಿತ 18 ಮಂದಿ ವಿರುದ್ಧ ಪ್ರಕರಣ ದಾಖಲು

ಕ್ರಿಸ್ ಗೋಪಾಲಕೃಷ್ಣನ್ PC: x.com/moneycontrolcom
ಬೆಂಗಳೂರು, ಜ.28: ಜಾತಿ ನಿಂದನೆ, ಬೆದರಿಕೆ ಹಾಕಿರುವ ಆರೋಪಕ್ಕೆ ಸಂಬಂಧಿಸಿದಂತೆ ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ ಮಾಜಿ ನಿರ್ದೇಶಕ ಬಲರಾಮ್ ಮತ್ತಿತರ 18 ಜನರ ವಿರುದ್ಧ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದನ್ ರಂಗರಾಜನ್, ರಂಗರಾಜನ್ ಶ್ರೀಧರ್ ವಾರಿಯರ್, ಸಂಧ್ಯಾ ವಿಶ್ವೇಶ್ವರಯ್ಯ, ಹರಿ ಕೆವಿಎಸ್, ದಾಸಪ್ಪ, ಹೇಮಲತಾ ಮಹಿತಿ, ಚಟ್ಟೋಪಾಧ್ಯಾಯ ಕೆ. ಪ್ರದೀಪ್ ಡಿ.ಸಾವರ್ ಮತ್ತು ಮನೋಹರನ್ ಮತ್ತಿತರರನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.
ಅಧ್ಯಾಪಕರಾಗಿದ್ದ ಬೋವಿ ಸಮುದಾಯಕ್ಕೆ ಸೇರಿದ ದುರ್ಗಪ್ಪ ಅವರು ದೂರು ನೀಡಿದ್ದು, "2014 ರಲ್ಲಿ ತನ್ನನ್ನು ಹನಿ ಟ್ರ್ಯಾಪ್ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಿ ವಜಾ ಮಾಡಲಾಗಿದೆ. ಇನ್ನೂ, ಕ್ರಿಸ್ ಗೋಪಾಲಕೃಷ್ಣನ್ ಸೇರಿ 18 ಮಂದಿ 2008 ರಿಂದ 2025ರ ವರೆಗೆ ಜಾತಿನಿಂದನೆ ದೌರ್ಜನ್ಯ ನಡೆಸುತ್ತಾ ಬಂದಿದ್ದಾರೆ" ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.