ಏರೋಸ್ಪೇಸ್ ಉದ್ಯಮಕ್ಕೆ ಪ್ರೋತ್ಸಾಹ ನೀಡಿ, ಪ್ರತಿಭಾ ಪಲಾಯನ ತಡೆಯಬೇಕು: ಡಿ.ಕೆ. ಶಿವಕುಮಾರ್

ಬೆಂಗಳೂರು: ನಮ್ಮ ರಾಜ್ಯದ ರಾಜಧಾನಿ ಬೆಂಗಳೂರು ಏರೋಸ್ಪೇಸ್ ಉದ್ಯಮದಲ್ಲಿ ಅತ್ಯುತ್ತಮ ಪ್ರತಿಭೆಗಳನ್ನು ಹೊಂದಿದೆ. ಇದು ವಿಮಾನ ಮತ್ತು ಹೆಲಿಕಾಪ್ಟರ್ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಲು ಸೂಕ್ತ ಸ್ಥಳವಾಗಿದೆ. ತಯಾರಕರಿಗೆ ಪ್ರೋತ್ಸಾಹ ನೀಡುವ ಮೂಲಕ, ಪ್ರತಿಭಾ ಪಲಾಯನವನ್ನು ತಡೆದು ನಮ್ಮ ದೇಶದ ಪ್ರತಿಭೆಗಳನ್ನು ಭಾರತದೊಳಗೆ ಉಳಿಸಿಕೊಳ್ಳಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.
ಸೋಮವಾರ ಯಲಹಂಕದಲ್ಲಿರುವ ವಾಯು ಸೇನಾ ನೆಲೆಯಲ್ಲಿ ಆಯೋಜಿಸಲಾಗಿರುವ ಏಷ್ಯಾದ ಅತಿದೊಡ್ಡ ಬಾಹ್ಯಾಕಾಶ ಮತ್ತು ರಕ್ಷಣಾ ಪ್ರದರ್ಶನ ‘ಏರೋ ಇಂಡಿಯಾ-2025’ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ರಕ್ಷಣಾ ಸಚಿವರು ಕರ್ನಾಟಕದಲ್ಲಿ ಏರೋಸ್ಪೇಸ್ ಉದ್ಯಮವನ್ನು ಸ್ಥಾಪಿಸಲು ಹಾಗೂ ವಿಮಾನ ಮತ್ತು ಹೆಲಿಕಾಪ್ಟರ್ಗಳ ತಯಾರಕರನ್ನು ಹೆಚ್ಚು, ಹೆಚ್ಚು ಬೆಂಗಳೂರಿನ ಕಡೆಗೆ ಗಮನ ಹರಿಸುವಂತೆ ಪ್ರೋತ್ಸಾಹ ನೀಡಬೇಕಾಗಿ ಮನವಿ ಮಾಡುತ್ತೇನೆ ಎಂದು ಶಿವಕುಮಾರ್ ಹೇಳಿದರು.
ಕರ್ನಾಟಕ ಭಾರತದ ತಾಂತ್ರಿಕ ಮತ್ತು ಕೈಗಾರಿಕಾ ಪ್ರಗತಿಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ವಿಶ್ವ ದರ್ಜೆಯ ಸಂಶೋಧನಾ ಸಂಸ್ಥೆಗಳು, ಅತ್ಯಾಧುನಿಕ ಏರೋಸ್ಪೇಸ್ ಕಂಪನಿಗಳನ್ನು ಹೊಂದಿರುವ ಕೌಶಲ್ಯಪೂರ್ಣ ಕಾರ್ಯಪಡೆಯೇ ನಮ್ಮಲ್ಲಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.
ಇತ್ತೀಚಿನ ವರ್ಷಗಳಲ್ಲಿ, ಕರ್ನಾಟಕವು ದೇಶದ ಒಟ್ಟು ದೇಶೀಯ ಉತ್ಪನ್ನ, ಕೈಗಾರಿಕಾ ಬೆಳವಣಿಗೆ ಮತ್ತು ಹೂಡಿಕೆಯ ಒಳಹರಿವು ಸೇರಿದಂತೆ ಪ್ರಮುಖ ಆರ್ಥಿಕ ಕ್ಷೇತ್ರಗಳಲ್ಲಿ ಅಗಾಧ ಬೆಳವಣಿಗೆ ಕಂಡಿದೆ. ಸಂಶೋಧನೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಉದ್ದಿಮೆಗೆ ಪ್ರೋತ್ಸಾಹಿಸುವ ಭವಿಷ್ಯದ ದೃಷ್ಟಿಯಿಂದ ಕೈಗಾರಿಕಾ ನೀತಿಯನ್ನು ಪೋಷಿಸಲು ನಮ್ಮ ಸರಕಾರ ಬದ್ಧವಾಗಿದೆ ಎಂದು ಶಿವಕುಮಾರ್ ಹೇಳಿದರು.
ಆಕಾಶಕ್ಕೆ ಮಿತಿಯಿಲ್ಲ ಎಂಬುದನ್ನು ಈ ವೈಮಾನಿಕ ಪ್ರದರ್ಶನದ ಮೂಲಕ ನಾವು ಕಂಡುಕೊಳ್ಳಬಹುದು. ಇದು ನಾಗರಿಕ ಮತ್ತು ಮಿಲಿಟರಿ ವಾಯುಯಾನ ಎರಡರಲ್ಲೂ ಭಾರತದ ಪ್ರಗತಿಯನ್ನು ಎತ್ತಿ ತೋರಿಸುವ ದೊಡ್ಡ ಕಾರ್ಯಕ್ರಮವಾಗಿದೆ. ಏರೋ ಇಂಡಿಯಾ ಕೇವಲ ಪ್ರದರ್ಶನವಲ್ಲ. ಇದು ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಭಾರತದ ಸಾಮಥ್ರ್ಯ ಬೆಳೆಯುತ್ತಿರುವುದಕ್ಕೆ ಸಾಕ್ಷಿ ಮತ್ತು ಅಂತರ್ರಾಷ್ಟ್ರೀಯ ಪಾಲುದಾರಿಕೆಗಳನ್ನು ಬೆಳೆಸುವ ವೇದಿಕೆ ಎಂದು ಉಪ ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.
2013ರಲ್ಲಿ ಏರೋಸ್ಪೇಸ್ ನೀತಿಯನ್ನು ಘೋಷಿಸಿದ ಮೊದಲ ರಾಜ್ಯ ಕರ್ನಾಟಕ. ನಮ್ಮ ರಾಜ್ಯವು ದೇವನಹಳ್ಳಿ ಬಳಿ ಏರೋಸ್ಪೇಸ್ ಕಂಪನಿಗಳಿಗಾಗಿ 1 ಸಾವಿರ ಎಕರೆ ಪ್ರದೇಶವನ್ನು ಮೀಸಲಿಟ್ಟು ಏರೋಸ್ಪೇಸ್ ಪಾರ್ಕ್ ಸ್ಥಾಪಿಸಿದೆ. ಇಂದು ಏರೋಸ್ಪೇಸ್ ಉದ್ಯಮವನ್ನು ಅಂತರ್ರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಬೆಂಗಳೂರು ಅತ್ಯುತ್ತಮ ನಗರವಾಗಿದೆ. ಅನೇಕ ಬ್ರ್ಯಾಂಡ್ಗಳು ಮತ್ತು ಅತ್ಯುತ್ತಮ ತಂತ್ರಜ್ಞಾನಗಳನ್ನು ಪ್ರದರ್ಶಿಸಲು ಬೆಂಗಳೂರು ಸೂಕ್ತ ಸ್ಥಳವಾಗಿದೆ ಎಂದು ಅವರು ಹೇಳಿದರು.
ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಳ್ಳಲು, ಉದ್ದಿಮೆಗಳ ಅತ್ಯುತ್ತಮ ಉತ್ಪನ್ನಗಳನ್ನು ಪರೀಕ್ಷಿಸಲು ಇದು ಸೂಕ್ತ ಸ್ಥಳವಾಗಿದೆ. ಬೆಂಗಳೂರು ಭಾರತದ ಏರೋಸ್ಪೇಸ್ ರಾಜಧಾನಿ. ದೇಶದ ಏರೋಸ್ಪೇಸ್ ಉತ್ಪಾದನೆ ಮತ್ತು ರಕ್ಷಣಾ ಸಂಶೋಧನೆಯ ಶೇ.60 ಕ್ಕಿಂತ ಹೆಚ್ಚು ಕೊಡುಗೆಯನ್ನು ನಮ್ಮ ರಾಜ್ಯ ನೀಡುತ್ತಿದೆ ಎಂದು ಶಿವಕುಮಾರ್ ತಿಳಿಸಿದರು.
ಎಚ್ಎಎಲ್, ಇಸ್ರೋ ಮತ್ತು ಬೋಯಿಂಗ್ ಇಂಡಿಯಾದಂತಹ ಪ್ರಮುಖ ಸಂಸ್ಥೆಗಳು ಭಾರತದ ರಕ್ಷಣಾ ಮತ್ತು ಬಾಹ್ಯಾಕಾಶ ಸಾಮಥ್ರ್ಯಗಳಿಗೆ ಸಾಕಷ್ಟು ಕೊಡುಗೆಗಳನ್ನು ನೀಡುತ್ತಿವೆ. ಬೆಂಗಳೂರಿನ ಏರೋಸ್ಪೇಸ್ ವಲಯದಲ್ಲಿ 1.50 ಲಕ್ಷಕ್ಕೂ ಹೆಚ್ಚು ಜನರು ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.
ವಿದೇಶಿ ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಬೆಂಗಳೂರು ಜಾಗತಿಕ ಏರೋಸ್ಪೇಸ್ ನಗರಗಳಲ್ಲಿ ಮೂರನೇ ಸ್ಥಾನವನ್ನು ಪಡೆದಿದೆ. ರಾಜ್ಯ ಸರಕಾರವು ಕರ್ನಾಟಕದಾದ್ಯಂತ ಅಂದರೆ ಬೆಂಗಳೂರು, ಬೆಳಗಾವಿ, ಮೈಸೂರು, ತುಮಕೂರು ಮತ್ತು ಚಾಮರಾಜನಗರಗಳಲ್ಲಿ ಏರೋಸ್ಪೇಸ್ ಮತ್ತು ರಕ್ಷಣಾ ಕೇಂದ್ರಗಳನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.
ವಾಣಿಜ್ಯ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಕ್ರಾಂತಿಯನ್ನೆ ಉಂಟು ಮಾಡುತ್ತಿರುವ ಡ್ರೋನ್ ತಂತ್ರಜ್ಞಾನ ಮತ್ತು ಮಾನವರಹಿತ ವೈಮಾನಿಕ ತಂತ್ರಜ್ಞಾನದ ರುವಾರಿಯಾಗಿ ಬೆಂಗಳೂರು ಬೆಳೆಯುತ್ತಿದೆ. ಬೆಂಗಳೂರು ಭಾರತದಲ್ಲಿಯೇ ಅತಿ ಹೆಚ್ಚು ಸಾಫ್ಟ್ವೇರ್ ಕಂಪನಿಗಳನ್ನು ಹೊಂದಿದೆ. ಅದಕ್ಕೆ ಇದನ್ನು ಭಾರತದ ಸಿಲಿಕಾನ್ ಸಿಟಿ ಎಂದು ಕರೆಯುತ್ತಾರೆ. ತಂತ್ರಜ್ಞಾನ ಮತ್ತು ಏರೋಸ್ಪೇಸ್ ವಲಯವನ್ನು ಮುನ್ನಡೆಸುವ ನಗರವಾಗಿ ಬೆಂಗಳೂರು ಬೆಳೆದಿದೆ ಎಂದು ಶಿವಕುಮಾರ್ ಹೇಳಿದರು.
ಕರ್ನಾಟಕವು ಭಾರತದ ಏರೋಸ್ಪೇಸ್ ವಲಯದಲ್ಲಿ ಅನೇಕ ಬಾರಿ ನಿರ್ಣಾಯಕ ಪಾತ್ರವನ್ನು ವಹಿಸಿದೆ. ಅಲ್ಲದೇ ರಕ್ಷಣಾ ಸೇವೆಗಳಿಗಾಗಿ ದೇಶದ ವಿಮಾನ ಮತ್ತು ಹೆಲಿಕಾಪ್ಟರ್ ಉತ್ಪಾದನೆಯ ಶೇ.67 ಮತ್ತು ಭಾರತದ ಏರೋಸ್ಪೇಸ್-ಸಂಬಂಧಿತ ರಫ್ತಿನ ಶೇ.65 ಕೊಡುಗೆ ನೀಡುತ್ತಿದೆ ಎಂದು ಅವರು ಹೇಳಿದರು.
ವಿಮಾನ ಸೇವೆ ಮತ್ತು ವಿಮಾನಗಳನ್ನು ದುರಸ್ತಿ ಮಾಡುವ ಕ್ಷೇತ್ರದಲ್ಲಿ ಭಾರತ ಮುಂದಿದೆ. ಆದರೆ ವಿಮಾನಗಳು ಮತ್ತು ಹೆಲಿಕಾಪ್ಟರ್ಗಳ ತಯಾರಿಕೆ ಇನ್ನೂ ಸ್ವಲ್ಪ ಹಿಂದೆ ಬಿದ್ದಿದೆ. ದೇಶವು ಬಳಸುವ ಹೆಚ್ಚಿನ ವಿಮಾನಗಳು ಮತ್ತು ಹೆಲಿಕಾಪ್ಟರ್ಗಳನ್ನು ಇನ್ನೂ ಇತರ ರಾಷ್ಟ್ರಗಳಿಂದ ಖರೀದಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ವಿಷಾದ ವ್ಯಕ್ತಪಡಿಸಿದರು.
ವಾಣಿಜ್ಯ ಮತ್ತು ರಕ್ಷಣಾ ವಿಮಾನ ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿರುವ ವಿಶ್ವದ ಏಕೈಕ ನಗರ ಬೆಂಗಳೂರು. ಈ ಕ್ಷೇತ್ರಕ್ಕೆ ಹೆಚ್ಚಿನ ಮಹಿಳೆಯರು ಕೊಡುಗೆ ನೀಡುತ್ತಿದ್ದಾರೆ. ಯು.ಎಸ್., ಫ್ರಾನ್ಸ್ ಮತ್ತು ರಷ್ಯಾದಂತಹ ದೇಶಗಳೊಂದಿಗೆ ಪಾಲುದಾರಿಕೆಗಳ ಮೂಲಕ ಭಾರತದ ಏರೋಸ್ಪೇಸ್ ಉದ್ಯಮವು ಬೆಳೆಯುತ್ತಿದೆ. ಈ ಪ್ರದರ್ಶನವು ದೇಶಗಳು ಒಗ್ಗೂಡಲು, ಜ್ಞಾನವನ್ನು ಹಂಚಿಕೊಳ್ಳಲು ಮತ್ತು ಎಲ್ಲರಿಗೂ ಪ್ರಯೋಜನವಾಗುವ ವಾತಾವರಣ ನಿರ್ಮಿಸಲು ಉತ್ತಮ ಅವಕಾಶ ನೀಡುತ್ತದೆ ಎಂದು ಅವರು ತಿಳಿಸಿದರು.
ಬೆಂಗಳೂರು ಏರ್ ಶೋ ಸಣ್ಣ ಕಾರ್ಯಕ್ರಮವಲ್ಲ. ಇದು ಬಾಹ್ಯಾಕಾಶದಲ್ಲಿ ಭಾರತದ ಶಕ್ತಿ, ಪ್ರಗತಿ ಮತ್ತು ನಾಯಕತ್ವದ ಸಂಕೇತವಾಗಿದೆ. ಬಾಹ್ಯಾಕಾಶ ಮತ್ತು ರಕ್ಷಣಾ ಹೂಡಿಕೆದಾರರು, ಉದ್ಯಮಿಗಳು ಮತ್ತು ವ್ಯಾಪಾರ ನಾಯಕರು ಕರ್ನಾಟಕವನ್ನು ಮೊದಲು ಆಯ್ಕೆ ಮಾಡಬೇಕು ಎಂದು ನಾನು ಕೋರುತ್ತೇನೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.