ಬೆಂಗಳೂರಿಗೆ ಸಿದ್ದರಾಮಯ್ಯ ಭರಪೂರ ಕೊಡುಗೆ
► 40 ಸಾವಿರ ಕೋಟಿ ವೆಚ್ಚದಲ್ಲಿ ಸುರಂಗ ಮಾರ್ಗ ► ‘ಬೆಂಗಳೂರು ಬಿಸ್ನೆಸ್ ಕಾರಿಡಾರ್’ ಘೋಷಣೆ

ಬೆಂಗಳೂರು : ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ಮತ್ತಷ್ಟು ಯೋಜನೆಗಳನ್ನು ಘೋಷಣೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಬಿಎಂಪಿಗೆ ಅಂದಾಜು ಮೊತ್ತ 40 ಸಾವಿರ ಕೋಟಿ ರೂ. ವೆಚ್ಚದಲ್ಲಿ ಸುರಂಗ ಮಾರ್ಗದ ಕಾರಿಡಾರ್, ಬೆಂಗಳೂರು ಬಿಸ್ನೆಸ್ ಕಾರಿಡಾರ್ ಸೇರಿದಂತೆ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
ಶುಕ್ರವಾರ ವಿಧಾನಸಭೆಯಲ್ಲಿ ಆಯವ್ಯಯ ಮಂಡಿಸಿದ ಅವರು, ನೆನೆಗುದಿಗೆ ಬಿದ್ದಿದ್ದ ಪೆರಿಫೆರಲ್ ರಿಂಗ್ ರಸ್ತೆ ಯೋಜನೆಯನ್ನು ಬೆಂಗಳೂರು ಬಿಸ್ನೆಸ್ ಕಾರಿಡಾರ್ ಎಂದು ಮರುನಾಮಕರಣಗೊಳಿಸಿ 73 ಕಿ.ಮೀ. ಉದ್ದದ ರಸ್ತೆಯನ್ನು ನಿರ್ಮಿಸಲು ಹುಡ್ಕೋ ಬ್ಯಾಂಕ್ ನೆರವಿನೊಂದಿಗೆ 27 ಸಾವಿರ ಕೋಟಿ ರೂ. ಯೋಜನೆಯನ್ನು ರೂಪಿಸಲಾಗಿದೆ. ಪ್ರತ್ಯೇಕ ತಂಡಗಳನ್ನು ರಚಿಸಿ ಭೂಸ್ವಾದೀನ ಪ್ರಕ್ರಿಯೆ ಪ್ರಾರಂಭಿಸಲಾಗಿದೆ ಎಂದು ಪ್ರಕಟಿಸಿದರು.
ವಾಹನ ದಟ್ಟಣೆ ಸಮಸ್ಯೆಯನ್ನು ನಿವಾರಿಸಲು ಹಾಗೂ ಸುಗಮ ಸಂಚಾರಕ್ಕಾಗಿ ಬೆಂಗಳೂರು ನಗರದ ಮುಖ್ಯ ರಸ್ತೆಗಳನ್ನು ಸಿಗ್ನಲ್ ಮುಕ್ತಗೊಳಿಸುವ ನಿಟ್ಟಿನಲ್ಲಿ ನಮ್ಮ ಮೆಟ್ರೋ ಹಂತ-3 ಯೋಜನೆಯೊಂದಿಗೆ 8,916 ಕೋಟಿ ರೂ. ವೆಚ್ಚದಲ್ಲಿ 40.50 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ಫ್ಲೈಓವರ್ ರಸ್ತೆಯನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.
ಬೆಂಗಳೂರು ನಗರದಲ್ಲಿ ಕಾಲುವೆಯ ಬಫರ್ ಪ್ರದೇಶವನ್ನು ಬಳಸಿಕೊಂಡು 3 ಸಾವಿರ ಕೋಟಿ ರೂ. ವೆಚ್ಚದಲ್ಲಿ 300 ಕಿ.ಮೀ. ಹೆಚ್ಚುವರಿ ರಸ್ತೆ ಜಾಲವನ್ನು ಅಭಿವೃದ್ಧಿಪಡಿಸಲಾಗುವುದು. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 460 ಕಿ.ಮೀ. ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆ ಜಾಲವನ್ನು 660 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಬೆಂಗಳೂರು ನಗರದಲ್ಲಿ 120 ಕಿ.ಮೀ. ಉದ್ದದ ಫ್ಲೈಓವರ್ ಹಾಗೂ ಗ್ರೇಡ್ ವಿಭಜಕಗಳನ್ನು ನಿರ್ಮಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
‘ಬ್ರ್ಯಾಂಡ್ ಬೆಂಗಳೂರು’ ಯೋಜನೆಯಡಿ 2024-25ನೇ ಸಾಲಿನಲ್ಲಿ ಅನುಮೋದನೆಗೊಂಡ 21 ಯೋಜನೆಗಳನ್ನು 1,800 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಕೈಗೊಂಡಿರುವ ವಿವಿಧ ಸುಧಾರಣಾ ಕ್ರಮಗಳಿಂದ ಆಸ್ತಿ ತೆರಿಗೆ ಸಂಗ್ರಹಣೆಯಲ್ಲಿ ಗಣನೀಯ ಹೆಚ್ಚಳ ಸಾಧಿಸಲಾಗಿದೆ ಎಂದು ತಿಳಿಸಿದರು.
ಬಿಬಿಎಂಪಿಗೆ ಅಂದಾಜು ಮೊತ್ತ 40 ಸಾವಿರ ಕೋಟಿ ರೂ. ವೆಚ್ಚದಲ್ಲಿ ಉತ್ತರ-ದಕ್ಷಿಣ ಮತ್ತು ಪೂರ್ವ-ಪಶ್ಚಿಮ ಸುರಂಗ ಮಾರ್ಗದ ಕಾರಿಡಾರ್ಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ 19 ಸಾವಿರ ಕೋಟಿ ರೂ. ಗ್ಯಾರಂಟಿಯನ್ನು ಸರಕಾರದಿಂದ ಒದಗಿಸಲಾಗಿದೆ. ಅದೇ ರೀತಿ, ಹವಾಮಾನ ವೈಪರೀತ್ಯದ ಪರಿಣಾಮವಾಗಿ ಬೆಂಗಳೂರು ನಗರವು ಎದುರಿಸುತ್ತಿರುವ ಪ್ರವಾಹವನ್ನು ನಿಯಂತ್ರಿಸಲು ವ್ಯವಸ್ಥಿತ ಒಳಚರಂಡಿ ಜಾಲ ಮತ್ತು ಎಸ್.ಟಿ.ಪಿ.ಗಳನ್ನು ನಿರ್ಮಿಸಲು ಸರಕಾರವು ಬಿಬಿಎಂಪಿ ಹಾಗೂ ಬಿಡಬ್ಲ್ಯೂಎಸ್ಎಸ್ಬಿ ಗೆ 3,000 ಕೋಟಿ ರೂ. ಆರ್ಥಿಕ ನೆರವು ನೀಡಲು ತೀರ್ಮಾನಿಸಲಾಗಿದೆ ಎಂದು ಪ್ರಕಟಿಸಿದರು.
2024-25ನೇ ಸಾಲಿನಲ್ಲಿ 5,550 ಕೋಟಿ ರೂ. ಮೊತ್ತದಲ್ಲಿ 775 ಎಂಎಲ್ಡಿ ಹೆಚ್ಚುವರಿ ನೀರಿನ ಸಾಮರ್ಥ್ಯವನ್ನು ಹೊಂದಿರುವ ಕಾವೇರಿ 5ನೆ ಹಂತದ ಯೋಜನೆಯನ್ನು ಸಾರ್ವಜನಿಕರಿಗೆ ಲೋಕಾರ್ಪಣೆಗೊಳಿಸಲಾಗಿದೆ. ಇದರಿಂದ 110 ಹಳ್ಳಿಗಳಲ್ಲಿರುವ 50 ಲಕ್ಷ ನಿವಾಸಿಗಳಿಗೆ ಜೀವಜಲ ದೊರಕಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಬಿಡಬ್ಲ್ಯೂಎಸ್ಎಸ್ಬಿ ವತಿಯಿಂದ ಎಸ್.ಟಿ.ಪಿ ಘಟಕಗಳ ತ್ಯಾಜ್ಯವನ್ನು ಬಳಸಿ ಬಯೋಗ್ಯಾಸ್-ಆಧಾರಿತ ಆದಾಯ ಮತ್ತು ಕಾರ್ಬನ್ ಕ್ರೆಡಿಟ್ಗಳ ಉಪಯೋಗವನ್ನು ಪಡೆಯುವ ನಿಟ್ಟಿನಲ್ಲಿ ಪಿಪಿಪಿ ಮಾದರಿಯಲ್ಲಿ ಯೋಜನೆಯನ್ನು ರೂಪಿಸಲಾಗುವುದು. ಕಾವೇರಿ ಹಂತ-6 ಅನುಷ್ಠಾನಕ್ಕಾಗಿ ವಿಸ್ರೃತ ಯೋಜನಾ ವರದಿಯನ್ನು ತಯಾರಿಸಲಾಗುವುದು. ಬಿಬಿಎಂಪಿ ವತಿಯಿಂದ ‘ಬ್ರ್ಯಾಂಡ್ ಬೆಂಗಳೂರು-ಹಸಿರು ಬೆಂಗಳೂರು’ ಅಡಿಯಲ್ಲಿ 35 ಕೋಟಿ ರೂ. ವೆಚ್ಚದ 14 ಕೆರೆಗಳ ಕಾಮಗಾರಿಗಳು ಪ್ರಗತಿಯಲ್ಲಿವೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ವರ್ತೂರು ಮತ್ತು ಬೆಳ್ಳಂದೂರು ಕೆರೆಗಳ ಪುನರುಜ್ಜೀವನ ಕಾಮಗಾರಿಗಳನ್ನು 234 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಮೆಟ್ರೋ: 98.60 ಕಿ.ಮೀ. ಹೆಚ್ಚುವರಿ ಕಾರ್ಯಾಚರಣೆ ಜಾಲ ಅಭಿವೃದ್ಧಿ: ಪ್ರಸ್ತುತದಲ್ಲಿ ‘ನಮ್ಮ ಮೆಟ್ರೋ’ 68 ನಿಲ್ದಾಣಗಳನ್ನೊಳಗೊಂಡಂತೆ 79.65 ಕಿ.ಮೀ. ಮಾರ್ಗದ ಕಾರ್ಯಾಚರಣೆ ನಡೆಸುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ಒಟ್ಟಾರೆ 98.60 ಕಿ.ಮೀ ಹೆಚ್ಚುವರಿ ಮಾರ್ಗಗಳ ಕಾರ್ಯಾಚರಣೆ ಜಾಲವನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ. ಮೆಟ್ರೋ ಜಾಲವನ್ನು ದೇವನಹಳ್ಳಿಯವರೆಗೆ ವಿಸ್ತರಿಸಲು ಯೋಜಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಮೂಲಸೌಲಭ್ಯ ಅಭಿವೃದ್ಧಿಗೆ 7 ಸಾವಿರ ಕೋಟಿ ರೂ.: ‘ರಾಜ್ಯದ ಆರ್ಥಿಕತೆಗೆ ಬಹುಮುಖ್ಯ ಕೊಡುಗೆ ನೀಡುವ ಬೆಂಗಳೂರು ನಗರದ ಮೂಲಸೌಲಭ್ಯಗಳ ಅಭಿವೃದ್ಧಿಗೆ ನಮ್ಮ ಸರಕಾರವು ಆದ್ಯತೆ ನೀಡುತ್ತದೆ. ಪ್ರತಿ ವರ್ಷ ನೀಡುತ್ತಿರುವ 3 ಸಾವಿರ ಕೋಟಿ ರೂ. ಅನುದಾನವನ್ನು ಪ್ರಸಕ್ತ ವರ್ಷದಲ್ಲಿ 7 ಸಾವಿರ ಕೋಟಿ ರೂ.ಗೆ ಹೆಚ್ಚಿಸಲಾಗುವುದು. ಈ ಅನುದಾನವನ್ನು ಬಳಸಿ ಬೃಹತ್ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಅನುಷ್ಠಾನಗೊಳಿಸಲು ಹೊಸದಾಗಿ ವಿಶೇಷ ಉದ್ದೇಶಿತ ಸಂಸ್ಥೆ ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
‘ಸಮಗ್ರ ಆರೋಗ್ಯ ಯೋಜನೆ’ ಜಾರಿ: ಬೆಂಗಳೂರನ್ನು ಅಂತಾರಾಷ್ಟ್ರೀಯ ಆರೋಗ್ಯ ಮಾನದಂಡಗಳ ನಗರವನ್ನಾಗಿ ಮಾಡಲು, ‘ಬ್ರ್ಯಾಂಡ್ ಬೆಂಗಳೂರು’ ಅಭಿಯಾನದ ಅಡಿಯಲ್ಲಿ ಮುಂದಿನ ಮೂರು ವರ್ಷಗಳಲ್ಲಿ 413 ಕೋಟಿ ರೂ. ವೆಚ್ಚದಲ್ಲಿ ‘ಸಮಗ್ರ ಆರೋಗ್ಯ ಯೋಜನೆ’ಯನ್ನು ಜಾರಿಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.