ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಬೇಡಿಕೆಗಳನ್ನು ಈಡೇರಿಸಲು ಸರಕಾರ ಬದ್ಧ : ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ನಿವೃತ್ತ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗ್ರ್ಯಾಚುಟಿ ಸೌಲಭ್ಯ ಸೇರಿ ಅವರ ಎಲ್ಲ ಬೇಡಿಕೆಗಳ ಕುರಿತು ಅಂಗನವಾಡಿ ಸಂಘಟನೆಗಳ ನಾಯಕರೊಂದಿಗೆ ನಾಳೆ(ಮಾ.20) ಸಭೆ ನಡೆಸಿ, ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ಬುಧವಾರ ನಗರದ ಫ್ರೀಡಂ ಪಾರ್ಕ್ನಲ್ಲಿ ಅಂಗನವಾಡಿ ಸಹಾಯಕಿಯರು ಮತ್ತು ಕಾರ್ಯಕರ್ತರಿಗೆ ಗ್ರ್ಯಾಚುಟಿ ಸೌಲಭ್ಯ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿ ವತಿಯಿಂದ ಆಯೋಜಿಸಿದ್ದ ಧರಣಿ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಮಸ್ಯೆಗಳನ್ನು ಪರಿಹರಿಸಿ ಅವರ ಬೇಡಿಕೆಗಳನ್ನು ಈಡೇರಿಸಲು ಸರಕಾರ ಬದ್ಧ ಎಂದು ತಿಳಿಸಿದರು.
ಬಜೆಟ್ನಲ್ಲಿ ಅಲ್ಪಪ್ರಮಾಣದ ಗೌರವಧನ ಹೆಚ್ಚಿಸಿರುವ ರಾಜ್ಯ ಸರಕಾರದ ಕ್ರಮವನ್ನು ವಿರೋಧಿಸಿ, ಕನಿಷ್ಠವೇತನಕ್ಕೆ ಸಮಾನವಾಗಿ ಗೌರವಧನ ಹೆಚ್ಚಿಸಬೇಕು. ಗೌರವಧನ ಹೆಚ್ಚಳದ 6ನೇ ಗ್ಯಾರಂಟಿ ಜಾರಿಗೊಳಿಸಬೇಕು. 2011 ರಿಂದ ನಿವೃತ್ತರಾದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸೌಲಭ್ಯ ಜಾರಿಗೊಳಿಸಬೇಕು ಎಂದು ಧರಣಿನಿರತರು ಆಗ್ರಹಿಸಿದರು.
ಕಳೆದ ಚುನಾವಣಾ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕ್ರಮವಾಗಿ ಮಾಸಿಕ 15 ಸಾವಿರ ರೂ. ಮತ್ತು 10 ಸಾವಿರ ರೂ. ಗೌರವಧನ ಹೆಚ್ಚಿಸುವುದಾಗಿ ಭರವಸೆನೀಡಲಾಗಿತ್ತು. ಆದರೆ ಬಜೆಟ್ನಲ್ಲಿ 1 ಸಾವಿರ ರೂ. ಮತ್ತು 750 ರೂ. ರೂ.ಗಳಷ್ಟೇ ಹೆಚ್ಚಿಸುವ ಮೂಲಕ ಕೊಟ್ಟ ಮಾತು ತಪ್ಪಲಾಗಿದೆ. ಹಾಗೂ ಗ್ರಾಚ್ಯುಟಿ ಸೌಲಭ್ಯವನ್ನು 2011ರಿಂದ ನಿವೃತ್ತ ಎಲ್ಲರಿಗೂ ನೀಡುವ ಬದಲು 2023 ರಿಂದ ಜಾರಿಗೆ ಬರುವಂತೆ ಪ್ರಾಯೋಗಿಕವಾಗಿ ಗ್ರಾಚ್ಯುಟಿ ನೀಡಲು ಮುಂದಾಗಿರುವ ಸರಕಾರದ ಕ್ರಮವನ್ನು ವಿರೋಧಿಸಿ, ನಿವೃತ್ತರೆಲ್ಲರಿಗೂ ಅನ್ವಯವಾಗುವಂತೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಧರಣಿಯಲ್ಲಿ ಎಐಟಿಯುಸಿ ಅಂಗನವಾಡಿ ಸಂಘಟನೆಯ ರಾಜ್ಯಾಧ್ಯಕ್ಷ ಬಿ.ಅಮ್ಜದ್, ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ, ಟಿಯುಸಿಸಿ ನೇತೃತ್ವದ ಅಂಗನವಾಡಿ ಸಂಘಟನೆಯ ರಾಜ್ಯಾಧ್ಯಕ್ಷ ಜಿ.ಆರ್.ಶಿವಶಂಕರ್, ಪ್ರಧಾನ ಕಾರ್ಯದರ್ಶಿ ಬಿ.ನಾಗರತ್ನಮ್ಮ, ಎಐಯುಟಿಯುಸಿ ನೇತೃತ್ವದ ಅಂಗನವಾಡಿಸಂಘಟನೆಯ ರಾಜ್ಯಾಧ್ಯಕ್ಷ ಕೆ.ಸೋಮಶೇಖರ ಯಾದಗಿರಿ, ಪ್ರಧಾನಕಾರ್ಯದರ್ಶಿ ಎಂ.ಉಮಾದೇವಿ ಮತ್ತಿತರರು ಹಾಜರಿದ್ದರು.