ವಿಳಂಬ ಧೋರಣೆ ಬಿಟ್ಟು ಕೆಲಸ ಮಾಡಿ...: ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ಬೆಂಗಳೂರು, ಆ.8: ಮಹಾತ್ಮಗಾಂಧಿ ರಾಷ್ಡ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಆಯಾ ಜಿಲ್ಲೆಗಳಲ್ಲಿ ಅವಶ್ಯವಿರುವ ಕಾಮಗಾರಿಗಳನ್ನು ಕೈಗೆತ್ತಿಕೊಂಡು ವಿಳಂಬವಿಲ್ಲದೆ ಕಾರ್ಯಗತಗೊಳಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ನಗರದಲ್ಲಿರುವ ಕೆಆರ್ಐಡಿಎಲ್ ಕಚೇರಿಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ವಿವಿಧ ಕಾರ್ಯುಕ್ರಮಗಳಲ್ಲಿ ಆಗಿರುವ ಪ್ರಗತಿಯನ್ನು ಪರಿಶೀಲಿಸಿ ಮಾತನಾಡಿದ ಅವರು, ಅಧಿಕಾರಿಗಳಿಗೆ ಸಮಸ್ಯೆ ಹಾಗೂ ಪರಿಹಾರ ಎರಡರ ಬಗ್ಗೆ ಅರಿವಿದ್ದರೂ ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸುವಲ್ಲಿ ವಿಳಂಬ ಧೋರಣೆ ತೆಳೆಯುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಪಂಚಾಯಿತಿ ಕಟ್ಟಡಗಳ ನಿರ್ಮಾಣ: ಗ್ರಾಮ ಪಂಚಾಯಿತಿಗಳ ಆಸ್ತಿ, ಅವುಗಳ ವ್ಯಾಪ್ತಿ, ಸದಸ್ಯರ ಸಂಖ್ಯಾ ಬಲಕ್ಕೆ ಅನುಗುಣವಾಗಿ ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡಗಳ ನಿರ್ಮಾಣ ಕೆಲಸ ಕೈಗೆತ್ತಿಕೊಳ್ಳಲು ಸೂಚಿಸಿದ ಅವರು, ನಿರ್ಮಾಣಕ್ಕೆ ಮುನ್ನ ವಿವರಗಳನ್ನು ಸಂಗ್ರಹಿಸುವ ಕೆಲಸವನ್ನು ತ್ವರಿತ ಗತಿಯಲ್ಲಿ ಕೈಗೆತ್ತಿಕೊಳ್ಳುವಂತೆ ನಿರ್ದೇಶಿಸಿದರು.
ಜಲಜೀವನ್ ಮಿಷನ್ ಅಡಿ ನಡೆಯುತ್ತಿರುವ ಪ್ರತಿ ಗ್ರಾಮಗಳಿಗೆ ಸಂಬಂಧಿಸಿದ ಕಾಮಗಾರಿಗಳ ವಿವರಗಳನ್ನು ಪಟ್ಟಿ ಮಾಡಲು ತಿಳಿಸಿದ ಪ್ರಿಯಾಂಕ್ ಖರ್ಗೆ, ಪ್ರತಿ ಕಾಮಗಾರಿಗಳ ಉದ್ದ, ಅವುಗಳಿಗೆ ಮಾಡಲಾಗುತ್ತಿರುವ ವೆಚ್ಚ, ಕಾಮಗಾರಿಯ ಸ್ಥಿತಿಗತಿಗಳ ಅಂಕಿಅಂಶಗಳನ್ನು ಸಂಗ್ರಹಿಸಲು ಹೇಳಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನಿರ್ದಿಷ್ಟ ದಿನದಂದು ನಿರ್ದಿಷ್ಟ ತಾಲೂಕಿಗೆ ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ, ಸಾರ್ವಜನಿಕರ ಅಹವಾಲು ಆಲಿಸಲು ಕ್ಯಾಲೇಂಡರ್ ಹಾಕಿಕೊಳ್ಳುವಂತೆ ಸೂಚಿಸಿ ಆದೇಶ ಹೊರಡಿಸಲು ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತರಿಗೆ ಪ್ರಿಯಾಂಕ್ ಖರ್ಗೆ ನಿರ್ದೇಶಿಸಿದರು.
ಅಂತರ್ಜಲ ಬರಿದಾಗುತ್ತಿರುವ ಬಗ್ಗೆ ಆತಂಕ: ರಾಜ್ಯದಲ್ಲಿ ಹೆಚ್ಚು ಅಂತರ್ಜಲ ತುಂಬಿದ್ದ ಕೊಡಗು ಹಾಗೂ ಮಲೆನಾಡಿನಲ್ಲಿ ಅಂತರ್ಜಲ ಕುಸಿಯುತ್ತಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಈ ಬಗ್ಗೆ ಕಾರಣಗಳನ್ನು ಪತ್ತೆ ಮಾಡಬೇಕಾದ ಅವಶ್ಯಕತೆ ಇದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ, ರಾಜ್ಯದ ಪ್ರತಿ ಗ್ರಾಮಗಳಿಗೆ ಸಂಬಂಧಿಸಿದಂತೆ ಕೆರೆ, ಜಲಾಶಯ, ನದಿ, ಕೊಳವೆಬಾವಿ ಮುಂತಾದ ನೀರಿನ ಸೌಲಭ್ಯಗಳ ವಿವರಗಳನ್ನು ಹೊಂದಿದಂತೆ ಮಾಹಿತಿ ಸಂಗ್ರಹಿಸಲು ಹೇಳಿದರು.
ರಾಜ್ಯದಲ್ಲಿ 18 ಸಾವಿರ ಶುದ್ಧ ನೀರು ಸರಬರಾಜು ಮಾಡುವ ಆರ್.ಒ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳು ಕೆಟ್ಟು ನಿಂತಾಗ ಕೂಡಲೆ ದುರಸ್ತಿ ಮಾಡುವಂತೆ ಆರ್.ಒ ನಿರ್ಮಾಣ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲು ಕ್ರಮ ಆಗಬೇಕಿದೆ. ಈ ಸಂಬಂಧ ತೆಗೆದುಕೊಳ್ಳಲಾಗುವ ಕ್ರಮಗಳ ಬಗ್ಗೆ ತಮಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ತಾಕೀತು ಮಾಡಿದರು.
ನಗರಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ನಗರ ಯೋಜಕರನ್ನು ನೇಮಿಸಿಕೊಳ್ಳುವಂತೆ ಗ್ರಾಮ ಯೋಜಕರನ್ನು ನೇಮಿಸಿಕೊಂಡು, ರಾಜ್ಯದಲ್ಲಿನ ಗ್ರಾಮಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಲಹೆ ಹಾಗೂ ಗ್ರಾಮಗಳಲ್ಲಿನ ಸೌಲಭ್ಯಗಳನ್ನು ಆಧರಿಸಿ ಶ್ರೇಣಿಗನುಸಾರ ಹಳ್ಳಿಗಳನ್ನು ಅಯ್ಕೆ ಮಾಡುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತ ಅಂಜುಮ್ ಪರ್ವೇಝ್, ಗ್ರಾಮೀಣ ನೀರು ಸರಬರಾಜು ಇಲಾಖೆಯ ನಿರ್ದೇಶಕ ಕೆ.ನಾಗೇಂದ್ರ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.