ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ : ಸಚಿವ ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು : ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಗುರುವಾರ ಇಲ್ಲಿನ ಜಯದೇವ ಹೃದಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ ನಡೆದ ಸಂವಾದದ ವೇಳೆ ಅವರು ಮಾತನಾಡಿದರು. ಈ ವೇಳೆ ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದ ನಂತರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸಲು ಅತಿಹೆಚ್ಚು ವರ್ಷಗಳನ್ನು ವ್ಯಯಿಸಿರುತ್ತಾರೆ. 60ನೆ ವಯಸ್ಸಿನಲ್ಲಿ ನಿವೃತ್ತರಾಗುವ ಮೊದಲು ನಮಗೆ 20-25 ವರ್ಷಗಳ ಕಾಲ ಮಾತ್ರ ಸೇವೆ ಸಲ್ಲಿಸಲು ಅವಕಾಶ ಲಭ್ಯವಾಗಿರುತ್ತದೆ ಎಂದು ವೈದ್ಯರು ಗಮನ ಸೆಳೆದರು.
ಆಗ ಪ್ರತಿಕ್ರಿಯಿಸಿದ ಸಚಿವ ಶರಣ ಪ್ರಕಾಶ್ ಪಾಟೀಲ್, ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಅನುಭವಿ ವೈದ್ಯರನ್ನು ಉಳಿಸಿಕೊಳ್ಳಲು ನಿವೃತ್ತಿ ವಯಸ್ಸನ್ನು ವಿಸ್ತರಿಸಲು ಸರ್ಕಾರ ಉತ್ಸುಕವಾಗಿದೆ. ಆರೋಗ್ಯ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ನಮ್ಮ ಅನುಭವಿ ವೈದ್ಯರ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಲು, ನಾನು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆಗೆ ಈ ವಿಷಯವನ್ನು ಚರ್ಚಿಸುತ್ತೇನೆ ಮತ್ತು ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿನ ವೈದ್ಯರ ನಿವೃತ್ತಿ ವಯಸ್ಸನ್ನು ಹೆಚ್ಚಿಸಲು ಪ್ರಸ್ತಾಪಿಸುತ್ತೇನೆ ಎಂದು ಹೇಳಿದರು.
ಅಭಿವೃದ್ಧಿಗೆ ಒತ್ತು: ಪ್ರಸ್ತುತ ವೈದ್ಯರು ಯಾವುದೇ ಸರಕಾರಿ ವಿಮಾ ಯೋಜನೆಯಡಿಯಲ್ಲಿ ಒಳಗೊಳ್ಳುವುದಿಲ್ಲ, ಆರೋಗ್ಯ ಇಲಾಖೆಯ ಅಡಿಯಲ್ಲಿ ಈಗಾಗಲೇ ಲಭ್ಯವಿರುವ ಜೀವನ ಸಂಜೀವಿನಿ ಎಂಬ ಯೋಜನೆಯನ್ನು ಜಾರಿಗೆ ತರಲು ಯೋಜಿಸುತ್ತಿದೆ. ವೈದ್ಯಕೀಯ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲು, ಜಯದೇವ ಆಸ್ಪತ್ರೆಗೆ ರೋಬೋಟಿಕ್ ಶಸ್ತ್ರಚಿಕಿತ್ಸಾ ಸೌಲಭ್ಯಗಳನ್ನು ಪರಿಚಯಿಸಲು ಸರ್ಕಾರ ಹೆಚ್ಚುವರಿ ಹಣವನ್ನು ಮಂಜೂರು ಮಾಡುತ್ತಿದೆ ಎಂದು ಘೋಷಿಸಿದರು.
ವೈದ್ಯಕೀಯ ಕ್ಷೇತ್ರದಲ್ಲಿ ನಾವೀನ್ಯತೆ ಮತ್ತು ಮುಂಚೂಣಿ ತಂತ್ರಜ್ಞಾನ ತರಲು, ಜಯದೇವ ಸಂಸ್ಥೆಯಲ್ಲಿ ಆಧುನಿಕ ಸಾಧನಗಳನ್ನು ಅಳವಡಿಸಲು ಮತ್ತು ಮೂಲಸೌಕರ್ಯ ಅಭಿವೃದ್ಧಿಪಡಿಸಲು ನಾವು ಬದ್ಧರಾಗಿದ್ದೇವೆ ಎಂದರು.