ನೆಲ, ಜಲ, ಭಾಷೆಯ ವಿಷಯದಲ್ಲಿ ರಾಜಕೀಯ ಬೇಡ; ನಾವೆಲ್ಲರೂ ಒಟ್ಟಾಗಿ ಹೋರಾಡೋಣ: ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಆ.23: ʼರಾಜ್ಯ ಸರಕಾರ ನೀರು ಹರಿಸುವ ನಿರ್ಧಾರ ಕೈಗೊಳ್ಳುವ ಬದಲು ತಮಿಳುನಾಡು ಅರ್ಜಿಗೆ ಪ್ರತಿಯಾಗಿ ಕೂಡಲೇ ತಕರಾರು ಅರ್ಜಿ ಸಲ್ಲಿಸಬೇಕಿತ್ತು. ಆದರೆ, ಇಂತಹ ಗಂಭೀರ ವಿಚಾರದಲ್ಲಿ ಸರಕಾರ ಲೋಪ ಮಾಡಿದೆʼ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಸರ್ವಪಕ್ಷ ಸಭೆಯ ಬಳಿಕ ಮಾತನಾಡಿದ ಅವರು, ನೆಲ, ಜಲ, ಭಾಷೆಯ ವಿಷಯದಲ್ಲಿ ರಾಜಕೀಯದ ಅಗತ್ಯ ಇಲ್ಲ. ನಾವೆಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು. ಆದರೆ, ಸರಕಾರ ಹೊಣೆಗಾರಿಕೆಯಿಂದ ವರ್ತಿಸಬೇಕುʼ ಎಂದರು.
ʼನೀರು ಹರಿಸುವ ಮೊದಲೇ ಸರ್ವಪಕ್ಷ ಸಭೆ ಕರೆದಿದ್ದರೆ, ಅದಕ್ಕೊಂದು ಅರ್ಥ ಇರುತ್ತಿತ್ತು. ಈಗ ನೀವು ತಮಿಳುನಾಡಿಗೆ ನೀರು ಹರಿಸುತ್ತಿದ್ದೀರಿ. ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಇದಕ್ಕೇನು ಸಮಜಾಯಿಷಿ ನೀಡುತ್ತಿರಾʼ ಎಂದು ಪ್ರಶ್ನಿಸಿದರು.
ʼಈ ಹಿಂದೆ ದೇವೇಗೌಡರು ಸೇರಿದಂತೆ ಇನ್ನೂ ಹಲವರು ಮುಖ್ಯಮಂತ್ರಿಗಳಾಗಿದ್ದಾಗ ಇಂತಹ ಪರಿಸ್ಥಿತಿ ಎದುರಾದಾಗ ಅದನ್ನು ಹೇಗೆ ಎದುರಿಸಲಾಯಿತು ಎಂಬುದನ್ನು ಕಾನೂನು ತಜ್ಞರ ತಂಡದ ಮುಖ್ಯಸ್ಥ ಮೋಹನ್ ಕಾತರಕಿ ಅವರು ಈ ಸಭೆಯಲ್ಲಿಯೇ ಹೇಳಿದ್ದಾರೆ. ಅದೆಲ್ಲಾ ವಿಷಯಗಳನ್ನು ಈ ಸರಕಾರ ತಿಳಿದುಕೊಳ್ಳಬೇಕುʼ ಎಂದು ತಿಳಿಸಿದರು.
ʼನೀರು ಬೇಕಾದರೆ ರೈತರೇ ನ್ಯಾಯಾಲಯಕ್ಕೆ ಹೋಗಲಿ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ. ಇಂತಹ ಹೇಳಿಕೆ ಸರಿ ಅಲ್ಲ. ರೈತರೇ ನ್ಯಾಯಾಲಯಕ್ಕೆ ಹೋಗುವುದಾದರೆ ಸರಕಾರ ಏಕೆ ಬೇಕು?. ಇಷ್ಟೆಲ್ಲಾ ವ್ಯವಸ್ಥೆಯ ಅಗತ್ಯ ಏನಿದೆʼ ಎಂದು ಪ್ರಶ್ನಿಸಿದರು,