ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ:ಆಕ್ಷೇಪಣೆ ಸಲ್ಲಿಸಲು ಸೂಚಿಸಿದ ಹೈಕೋರ್ಟ್

ರಮೇಶ್ ಜಾರಕಿಹೊಳಿ
ಬೆಂಗಳೂರು, ಜು.30: ಮಾಜಿ ಸಚಿವ, ಗೋಕಾಕ್ ಕ್ಷೇತ್ರದ ಹಾಲಿ ಶಾಸಕ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣ ಸಂಬಂಧಿಸಿದಂತೆ ಲಿಖಿತ ಸಾರಾಂಶವುಳ್ಳ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಉಭಯ ಪಕ್ಷಗಾರರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣದ ತನಿಖೆಗೆ ಎಸ್ಐಟಿ ರಚನೆಯ ಸಿಂಧುತ್ವ ಪ್ರಶ್ನಿಸಿ ಹಾಗೂ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಜಾರಕಿಹೊಳಿ ದಾಖಲಿಸಿರುವ ಬ್ಲ್ಯಾಕ್ಮೇಲ್ ಪ್ರಕರಣದ ಎಫ್ಐಆರ್ ರದ್ದುಪಡಿಸುವಂತೆ ಹೈಕೋರ್ಟ್ಗೆ ಕೋರಿ ಪ್ರಕರಣದ ಸಂಸ್ಥೆ ಹಾಗೂ ಆರೋಪಿಗಳಾದ ಎಸ್.ಶ್ರವಣ್ ಕುಮಾರ್ ಹಾಗೂ ಬಿ.ಎಂ.ನರೇಶ್ ಪ್ರತ್ಯೇಕವಾಗಿ ಅರ್ಜಿಗಳನ್ನು ಸಲ್ಲಿಸಿದ್ದರು.
ಈ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ ಲಿಖಿತ ಸಾರಾಂಶ ಸಲ್ಲಿಸುವಂತೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿದೆ. ವಕೀಲರ ವಾದ ಆಲಿಸಿದ ನ್ಯಾಯಪೀಠವು, ಮುಂದಿನ ವಿಚಾರಣೆಯ ವೇಳೆಗೆ ಆಕ್ಷೇಪಣೆ, ವಿಚಾರಣೆಗಳ ಸಾರಾಂಶ, ಲಿಸ್ಟ್ ಆಫ್ ಅಥಾರಿಟಿಯನ್ನು ಎಲ್ಲ ಪಕ್ಷಕಾರರು ಸಲ್ಲಿಸಬೇಕು. ಲಿಖಿತ ರೂಪದಲ್ಲಿ ಸಲ್ಲಿಸಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ಆ.16ಕ್ಕೆ ಮುಂದೂಡಿತು.