ಮುಡಾ ಪ್ರಕರಣ | ಹೈಕೋರ್ಟ್ ಸಿದ್ದರಾಮಯ್ಯರನ್ನು ಆರೋಪ ಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ

ಬಿ.ವೈ.ವಿಜಯೇಂದ್ರ
ಬೆಂಗಳೂರು : ಮೈಸೂರಿನ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರಪರಾಧಿ ಎಂಬುದಾಗಿ ಹೈಕೋರ್ಟ್ ಹೇಳಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ.
ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೈಸೂರಿನ ಮುಡಾ ಹಗರಣದಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ರಾಜ್ಯ ಹೈಕೋರ್ಟಿನಲ್ಲಿ ಸಂಪೂರ್ಣ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಕೋರಿದ್ದರು. ಆ ಅರ್ಜಿಯನ್ನು ರಾಜ್ಯ ಹೈಕೋರ್ಟ್ ತಿರಸ್ಕರಿಸಿದೆ. ಅದರ ಅರ್ಥ ಸಿಎಂ ಸಿದ್ದರಾಮಯ್ಯನವರು ನಿರಪರಾಧಿ ಎಂದು ಹೈಕೋರ್ಟ್ ಹೇಳಿಲ್ಲ ಎಂದು ವಿವರಿಸಿದರು.
ಸಿದ್ದರಾಮಯ್ಯನವರನ್ನು ಆರೋಪ ಮುಕ್ತರನ್ನಾಗಿ ಹೈಕೋರ್ಟ್ ಮಾಡಿಲ್ಲ. ಸಿಬಿಐ ತನಿಖೆಗೆ ಕೊಡುವುದಿಲ್ಲ ಎಂಬ ತೀರ್ಪನ್ನು ರಾಜ್ಯ ಹೈಕೋರ್ಟ್ ಹೇಳಿದೆ ಎಂದು ತಿಳಿಸಿದರು. ಇದರಿಂದ ಮೈಸೂರಿನ ಮುಡಾ ಹಗರಣದ ವಿಷಯದಲ್ಲಿ ಸಿಎಂ ಕುಟುಂಬ ಒಳಗೊಂಡ ಕುರಿತ ಬಿಜೆಪಿ ಹೋರಾಟ ಮತ್ತು ಪಾದಯಾತ್ರೆಗೆ ಹಿನ್ನಡೆ ಆಗಿಲ್ಲ ಎಂದು ಅವರು ನುಡಿದರು.
ಮುಡಾ ಹಗರಣದಲ್ಲಿ ಸಿಎಂ ಕುಟುಂಬ ಭಾಗಿ ಆಗಿರುವುದು ಮತ್ತು ಸಾವಿರಾರು ಕೋಟಿ ರೂಪಾಯಿ ಲೂಟಿ ಆದುದನ್ನು ತಿಳಿಸಿ ನಾವು ಹೋರಾಟ ಮಾಡಿದ್ದೆವು. ನಮ್ಮ ಆರೋಪಕ್ಕೆ ಇವತ್ತಿಗೂ ನಾವು ಬದ್ಧರಾಗಿದ್ದೇವೆ ಎಂದರು.
ವಾರ್ತಾ ಭಾರತಿಯ ವಾಟ್ಸ್ ಆ್ಯಪ್ ಚಾನಲ್ ಗೆ ಸೇರಲು ಕ್ಲಿಕ್ ಮಾಡಿ ►https://whatsapp.com/channel/0029VaA8ju86LwHn9OQpEq28