‘ರಾಜ್ಯಾಧ್ಯಕ್ಷ ಹುದ್ದೆಗೆ ಸಮರ್ಥರನ್ನು ನೇಮಿಸಿ’: ಬಿಜೆಪಿ ಶಿಸ್ತು ಸಮಿತಿ ನೋಟಿಸ್ಗೆ ಯತ್ನಾಳ್ ಉತ್ತರ

ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು : ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೀಡಿರುವ ಶೋಕಾಸ್ ನೋಟಿಸ್ಗೆ ವಿಜಯಪುರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ‘ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಸಮರ್ಥರನ್ನು ನೇಮಕ ಮಾಡಬೇಕುʼ ಎಂದು ಕೋರಿದ್ದಾರೆ.
ಕೇಂದ್ರ ಶಿಸ್ತು ಸಮಿತಿ ನೀಡಿದ ನೋಟಿಸ್ಗೆ ಮಂಗಳವಾರ ಐದು ಪುಟಗಳ ಉತ್ತರ ನೀಡಿದ್ದು, ‘ನಾನು ಪಕ್ಷದ ಚೌಕಟ್ಟಿನಲ್ಲೇ ವಕ್ಫ್ ಆಸ್ತಿ ಸಂರಕ್ಷಣೆಗೆ ಸಂಬಂಧಿಸಿದಂತೆ ಹೋರಾಟ ನಡೆಸಿದ್ದೇವೆ. ಪಕ್ಷಕ್ಕೆ ಧಕ್ಕೆಯಾಗುವಂತಹ ಯಾವ ಕೆಲಸವನ್ನೂ ಮಾಡಿಲ್ಲ. ಅಲ್ಲದೆ, ಯಾವುದೇ ಬಣ ರಾಜಕಾರಣವನ್ನೂ ಮಾಡಿಲ್ಲ’ ಎಂದು ತಿಳಿಸಿದ್ದಾರೆಂದು ಗೊತ್ತಾಗಿದೆ.
‘ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಜನ ಪಕ್ಷಪಾತ ಮಾಡುತ್ತಿದ್ದು, ಪಕ್ಷದ ಹಿರಿಯರು-ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಈ ಕಾರಣದಿಂದ ಪಕ್ಷಕ್ಕೆ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಕುಟುಂಬ ರಾಜಕಾರಣ ಕೊನೆಗೊಳ್ಳಬೇಕು. ಹೀಗಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಮುನ್ನಡೆಸುವವರಿಗೆ ರಾಜ್ಯಾಧ್ಯಕ್ಷ ಜವಾಬ್ದಾರಿ ನೀಡಬೇಕು’ ಎಂದು ಯತ್ನಾಳ್ ಆಗ್ರಹಿಸಿದ್ದಾರೆಂದು ಮೂಲಗಳು ತಿಳಿಸಿವೆ.
‘ಕಾಂಗ್ರೆಸ್ ಸರಕಾರವು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ, ವಾಲ್ಮೀಕಿ ನಿಗಮದ ಹಣ ದುರ್ಬಳಕೆ, ವಕ್ಫ್ ಪಹಣಿಗಳ ಬದಲಾವಣೆ, ರೈತರು-ಅಧಿಕಾರಿಗಳು ಮತ್ತು ಗುತ್ತಿಗೆದಾರರ ಆತ್ಮಹತ್ಯೆ, ಕೆಪಿಎಸ್ಸಿ ಪರೀಕ್ಷಾ ಲೋಪಗಳು ಸೇರಿದಂತೆ ಹಲವು ವಿಚಾರಗಳಲ್ಲಿ ಹೋರಾಟದ ಅವಕಾಶಗಳು ದೊರೆತಿದ್ದವು. ಆದರೆ, ಅಸಮರ್ಥತೆ ರಾಜ್ಯಾಧ್ಯಕ್ಷರು ಇರುವ ಕಾರಣದಿಂದ ಈ ಹೋರಾಟಗಳಲ್ಲಿ ಪಕ್ಷವು ವಿಫಲವಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆಂದು ಹೇಳಲಾಗಿದೆ.
ಮುಂಬರಲಿರುವ ವಿಧಾನಸಭಾ ಚುನಾವಣೆ ವೇಳೆಗೆ ಪಕ್ಷ ಸಂಘಟನೆ ಮಾಡಲು ಈಗಿನಿಂದಲೇ ಸಿದ್ದತೆ ಮಾಡುವ ದೃಷ್ಟಿಯಿಂದ ರಾಜ್ಯಾಧ್ಯಕ್ಷರನ್ನು ಬದಲಿಸಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಮುನ್ನಡೆಸುವವರಿಗೆ ಆ ಜವಾಬ್ದಾರಿಯನ್ನು ನೀಡಬೇಕು ಎಂದು ಯತ್ನಾಳ್, ವರಿಷ್ಠರನ್ನು ಕೋರಿದ್ದಾರೆಂದು ಮೂಲಗಳು ತಿಳಿಸಿವೆ.
ರಾಜ್ಯಾಧ್ಯಕ್ಷ ವಿಜಯೇಂದ್ರ, ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡಿದ್ದ ಆರೋಪದ ಮೇಲೇ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯು ಯತ್ನಾಳ್ಗೆ ಫೆ.10ರಂದು ಶೋಕಾಸ್ ನೋಟಿಸ್ ನೀಡಿತ್ತು. 72 ಗಂಟೆಗಳಲ್ಲಿ ಉತ್ತರ ನೀಡುವಂತೆ ಸೂಚಿಸಿತ್ತು. ಆ ಹಿನ್ನೆಲೆಯಲ್ಲಿ ಯತ್ನಾಳ್, ಕೇಂದ್ರ ಶಿಸ್ತು ಸಮಿತಿಗೆ ಉತ್ತರ ನೀಡಿದ್ದಾರೆಂದು ತಿಳಿದು ಬಂದಿದೆ.