ಮೇ 5ರಿಂದ ಉಡುಪಿ ಜಿಲ್ಲೆಯಲ್ಲಿ 1,112 ಶಿಕ್ಷಕ ಗಣತಿದಾರರಿಗೆ ತರಬೇತಿ: ಜಿಲ್ಲಾಧಿಕಾರಿ ವಿದ್ಯಾಕುಮಾರಿ
ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷಾ ಕಾರ್ಯ

ಉಡುಪಿ, ಎ.28: ಜಿಲ್ಲೆಯಲ್ಲಿ ಮೇ 5ರಿಂದ ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಗಾಗಿ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಗಳ ಸಂಗ್ರಹಕ್ಕಾಗಿ ಸಮೀಕ್ಷಾ ಕಾರ್ಯ ಪ್ರಾರಂಭಗೊಳ್ಳಲಿದ್ದು, ಇದಕ್ಕಾಗಿ ಒಟ್ಟು 1112 ಮಂದಿ ಶಿಕ್ಷಕ ಗಣತಿದಾರರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.
ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಸೋಮವಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಇವರ ಸಹಯೋಗದಲ್ಲಿ ಪರಿಶಿಷ್ಟ ಜಾತಿ/ಉಪಜಾತಿ ಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಮಾಸ್ಟರ್ ಟ್ರೈನರ್ ಗಳಿಗೆ ಆಯೋಜಿಸಲಾದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳ ಸಮೀಕ್ಷೆ ಸಂಬಂಧ ಮೊಬೈಲ್ ಆ್ಯಪ್ ಮೂಲಕ ಜಿಲ್ಲೆಯಲ್ಲಿ ಮೂರು ಹಂತಗಳಲ್ಲಿ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ತಾಲೂಕು ಮಟ್ಟದಲ್ಲಿ ಮಾಸ್ಟರ್ ಟ್ರೈನರ್ಗಳಾದ ಪ್ರಾಥ ಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರುಗಳಿಗೆ ತರಬೇತಿ ಹಮ್ಮಿಕೊಳ್ಳಲಾಗಿದೆ. ತರಬೇತಿ ಪಡೆದ ಗಣತಿದಾ ರರು ನಿಗದಿತ ಅವಧಿಯಲ್ಲಿ ನಿಖರ ಮಾಹಿತಿಗಳನ್ನು ಕಲೆಹಾಕಬೇಕಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಯಲ್ಲಿ ಮೇ 5ರಿಂದ ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ದತ್ತಾಂಶಗಳನ್ನು ಸಂಗ್ರಹಿಸುವ ಸಮೀಕ್ಷಾ ಕಾರ್ಯ ನಡೆಯಲಿದೆ. ಮೊದಲನೇ ಹಂತದಲ್ಲಿ ಮೇ 5ರಿಂದ 17ರವರೆಗೆ ಸಮೀಕ್ಷಾದಾರರು ಮನೆ ಮನೆಗೆ ಭೇಟಿ ನೀಡಲಿದ್ದಾರೆ. ಎರಡನೇ ಹಂತದಲ್ಲಿ ಮೇ 19ರಿಂದ 21ರ ವರೆಗೆ ವಿಶೇಷ ಶಿಬಿರಗಳನ್ನು ಕೈಗೊಳ್ಳುವ ಮೂಲಕ ಮನೆ ಮನೆ ಭೇಟಿಯ ಅವಧಿಯಲ್ಲಿ ಬಿಟ್ಟುಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿಯನ್ನು ಸಂಗ್ರಹಿಸಲಾಗುವುದು ಎಂದ ಅವರು, ಮೂರನೇ ಹಂತದಲ್ಲಿ ಆನ್ಲೈನ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳಿದ್ದು, ಒಂದೊಂದು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 200ರಿಂದ 250 ಗಣತಿದಾರರ ಅಗತ್ಯವಿದೆ. ಇದಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 1,112 ಮಂದಿ ಶಿಕ್ಷಕರಿಗೆ ತರಬೇತಿ ನೀಡಿ, ದತ್ತಾಂಶ ಸಂಗ್ರಹ ಕಾರ್ಯಕ್ಕೆ ನೇಮಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮತದಾರರ ಪಟ್ಟಿಯಲ್ಲಿರುವ ಮನೆಗಳ ಆಧಾರದ ಮೇಲೆ ಸಮೀಕ್ಷಾ ಕಾರ್ಯವನ್ನು ಪ್ರಾರಂಭಿಸಬೇಕು. ಸಮೀಕ್ಷೆದಾರರು ಮೊಬೈಲ್ ಆ್ಯಪ್ ಅನ್ನು ಬಳಕೆ ಮಾಡುವುದರೊಂದಿಗೆ ಸಮೀಕ್ಷೆಯ ಅಪ್ಲಿಕೇಷನ್ಗೆ ಲಾಗಿನ್ ಆಗಿ ಮೊಬೈಲ್ ಸಂಖ್ಯೆಗೆ ಸ್ವೀಕೃತವಾಗುವ ಒಟಿಪಿಯನ್ನು ನಮೂದಿಸಿ, 42 ವಿವಿಧ ಮಾಹಿತಿ ಗಳನ್ನು, ಕುಟುಂಬ ಸದಸ್ಯರ ಸ್ವಯಂ ಘೋಷಿತ ವಿವರಗಳನ್ನು ದಾಖಲಿಸಬೇಕು ಎಂದರು.
ಭಿನ್ನ ಸ್ಥಳಗಳಲ್ಲಿ ವಾಸವಾಗಿರುವ, ವಿವಿಧ ವೃತ್ತಿಗಳಲ್ಲಿ ತೊಡಗಿರುವ ವ್ಯಕ್ತಿಗಳು ಹಾಗೂ ಜನ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಹಾಗೂ ಆರ್ಥಿಕ ಅಸಮಾನತೆಯನ್ನು ಕಡಿಮೆ ಮಾಡುವುದರೊಂದಿಗೆ ಭವಿಷ್ಯದಲ್ಲಿ ಸರಕಾರದ ಸೌಲಭ್ಯಗಳ ಪ್ರಯೋಜನ ಪಡೆದುಕೊಳ್ಳಲು ಈ ಸಮೀಕ್ಷೆಯು ಅನುಕೂಲಕರವಾಗಲಿದೆ. ಮನೆ ಮನೆ ಭೇಟಿ ನೀಡುವ ಶಿಕ್ಷಕರಿಗೆ ಪರಿಶಿಷ್ಟ ಜಾತಿ ಸಮುದಾಯದವರು ಎಲ್ಲಾ ಮಾಹಿತಿಗಳನ್ನು ನೀಡುವ ಮೂಲಕ ಅಗತ್ಯ ಸಹಕಾರ ನೀಡಬೇಕು ಎಂದರು.
ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷಾ ಕಾರ್ಯವನ್ನು ಗಣತಿದಾರರು ವೈಜ್ಞಾನಿಕ ಹಾಗೂ ಸಮರ್ಪಕವಾಗಿ ನಿರ್ವಹಿಸು ವುದರೊಂದಿಗೆ ಯಾರೊಬ್ಬರೂ ಕೂಡ ಸಮೀಕ್ಷೆಯಿಂದ ಬಿಟ್ಟುಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ಡಾ.ವಿದ್ಯಾಕುಮಾರಿ ಹೇಳಿದರು.
ಕಾರ್ಯಾಗಾರದಲ್ಲಿ ಸಹಾಯಕ ಕಮೀಷನರ್ ರಶ್ಮಿ ಎಸ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಾರಾಯಣ ಸ್ವಾಮಿ, ತರಬೇತಿಗೆ ನಿಯೋಜಿತಗೊಂಡ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
ಡಯಟ್ ಉಪಪ್ರಾಂಶುಪಾಲ ಡಾ.ಅಶೋಕ್ ಕಾಮತ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
‘ತರಬೇತಿ ಪಡೆದ ಮಾಸ್ಟರ್ ಟ್ರೈನರ್ಗಳು ಮೂಲ ಜಾತಿಯನ್ನು ಸಮೀಕ್ಷೆ ಯಲ್ಲಿ ಸೇರಿಸಲು ಹೆಚ್ಚು ಒತ್ತು ನೀಡಬೇಕು. ಪ್ರತೀ 10ರಿಂದ 12 ಸಮೀಕ್ಷೆದಾರರಿಗೆ ಓರ್ವ ಮೇಲ್ವಿಚಾರಕರನ್ನು ನೇಮಿಸಲಾಗುವುದು.’
-ಡಾ.ಕೆ.ವಿದ್ಯಾಕುಮಾರಿ, ಉಡುಪಿ ಜಿಲ್ಲಾಧಿಕಾರಿ.
‘ಪರಿಶಿಷ್ಟ ಜಾತಿಯಲ್ಲಿ 101 ಉಪಜಾತಿಗಳಿವೆ. ಇವೆಲ್ಲವೂಗಳನ್ನು ಸಮೀಕ್ಷೆಯ ಅಡಿಯಲ್ಲಿ ತರಬೇಕು ಎಂಬ ನಿಟ್ಟಿನಲ್ಲಿ ಶಿಕ್ಷಕರುಗಳನ್ನು ದತ್ತಾಂಶ ಸಂಗ್ರಹ ಕಾರ್ಯಕ್ಕೆ ನಿಯೋಜಿಸಲಾಗುತ್ತಿದೆ. ಪರಿಶಿಷ್ಟ ಜಾತಿ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಧ್ಯಯನವನ್ನೂ ಸಹ ಸಮೀಕ್ಷೆಯಲ್ಲಿ ಮಾಡಲಾಗುವುದು.’
-ಡಾ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ.