ಸ್ವಚ್ಛತಾ ಹೀ ಸೇವಾ ಪಾಕ್ಷಿಕದ ಸಮಾರೋಪ ಸಮಾರಂಭ
ಉಡುಪಿ, ಅ.5: ಸಾರ್ವಜನಿಕರಲ್ಲಿ ನೈರ್ಮಲ್ಯ, ಶುಚಿತ್ವದ ಮಹತ್ವ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ‘ಸ್ವಭಾವ ಸ್ವಚ್ಛತಾ ಸಂಸ್ಕಾರ ಸ್ವಚ್ಛತಾ’ ಎಂಬ ಧ್ಯೇಯವಾಕ್ಯದೊಂದಿಗೆ ಸ್ವಚ್ಛತಾ ಹೀ ಸೇವಾ ಆಂದೋಲನದ ಅಂಗವಾಗಿ ಅ.2ರವರೆಗೆ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಛತಾ ಪ್ರತಿಜ್ಞೆ, ಸಸಿ ನೆಡುವುದು, ತ್ಯಾಜ್ಯದಿಂದ ಕಲಾಕೃತಿ, ನೈರ್ಮಲ್ಯ ಶುಚಿತ್ವ ಕುರಿತು ಪ್ರಬಂಧ ಸ್ಪರ್ಧೆ, ಸ್ವಚ್ಛತೆಯ ಬಗ್ಗೆ ಕಿರು ನಾಟಕ, ಸ್ವಚ್ಛತಾ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಯಿತು.
ಅ.2ರಂದು ಗಾಂಧಿ ಜಯಂತಿ ಆಚರಣೆಯೊಂದಿಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ ವನ್ನು ಆಯೋಜಿಸಿದ್ದು, ಈ ಸಂದರ್ಭದಲ್ಲಿ ಜಿಲ್ಲಾ ಸರ್ಜನ್ ಡಾ. ಹೆಚ್. ಅಶೋಕ್ ಮಹಾತ್ಮಾ ಗಾಂಧೀಜಿಯವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡುವುದು, ಸಾರ್ವಜನಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮ ರಾವ್, ಜಿಲ್ಲಾ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ವಾಸುದೇವ ಎಸ್, ಎಂಸಿಹೆಚ್ ಆಸ್ಪತ್ರೆಯ ಎ.ಎಂ.ಒ ಡಾ.ರಾಜಗೋಪಾಲ ಭಂಡಾರಿ ಹಾಗೂ ಇತರರು ಉಪಸ್ಥಿತರಿದ್ದರು.
ತ್ಯಾಜ್ಯದಿಂದ ಕಲಾಕೃತಿ ಹಾಗೂ ನೈರ್ಮಲ್ಯ ಶುಚಿತ್ವ ಕುರಿತ ಪ್ರಬಂಧ ಸ್ಪರ್ಧೆ ಹಾಗೂ ಸ್ವಚ್ಛತೆಯ ಬಗ್ಗೆ ಕಿರು ನಾಟಕ ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಬಹಮಾನಗಳನ್ನು ವಿತರಿಸಲಾಯಿತು.