ವಿಜಯನಗರ | ವರ್ಷಾಂತ್ಯಕ್ಕೆ ದಡಾರ, ರುಬೆಲ್ಲಾ ಮುಕ್ತ ಜಿಲ್ಲೆಯನ್ನಾಗಿಸಲು ವೈದ್ಯರು ಕಾಳಜಿ ವಹಿಸಿ : ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್
ಅಂತರ್ ಇಲಾಖೆಯ ಸಮನ್ವಯ ಸಮಿತಿ ಸಭೆ

ವಿಜಯನಗರ(ಹೊಸಪೇಟೆ) : ವರ್ಷಾಂತ್ಯಕ್ಕೆ ದಡಾರ ಮತ್ತು ರುಬೆಲ್ಲಾ ಮುಕ್ತ ಜಿಲ್ಲೆಯನ್ನಾಗಿಸಲು ವೈದ್ಯರೊಂದಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಡಾರ ಮತ್ತು ರುಬೇಲ್ಲಾ ನಿರ್ಮೂಲನ ಕಾರ್ಯಕ್ರಮದ ಅಂತರ್ ಇಲಾಖೆಯ ಸಮನ್ವಯ ಸಮಿತಿ ಸಭೆ ಮತ್ತು ತಾಯಿ ಮತ್ತು ಶಿಶು ಮರಣಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಗುರುವಾರ ಅವರು ಮಾತನಾಡಿದರು.
ದಡಾರಾ, ರುಬೇಲ್ಲಾ ರೋಗಿಗಳ ಬಗ್ಗೆ ವೈದ್ಯರು ವಿಶೇಷ ಕಾಳಜಿ ವಹಿಸಬೇಕಿದೆ. ವರ್ಷಾಂತ್ಯದೊಳಗೆ ದಡಾರ ಮತ್ತು ರುಬೆಲ್ಲಾ ರೋಗಮುಕ್ತವನ್ನಾಗಿಸಲು ಗುರಿಯನ್ನು ನಿಗಧಿಪಡಿಸಿ ಜಿಲ್ಲೆಯಲ್ಲಿ ಶಿಸ್ತಬದ್ಧವಾಗಿ ಕಾರ್ಯ ನಿರ್ವಹಿಸಬೇಕಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಸಂಘ-ಸಂಸ್ಥೆಗಳು, ಆಶಾ ಕಾರ್ಯಕರ್ತೆಯರ ಸಹಕಾರ ಪಡೆದುಕೊಂಡು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹೇಳಿದರು.
ಆಯುಷ್ ಇಲಾಖೆಯಿಂದ ಗರ್ಭಿಣಿ ಮತ್ತು ಬಾಣಂತಿಯರ ತಪಾಸಣೆ, ಸುರಕ್ಷಿತ ಹೆರಿಗೆ ಹಾಗೂ ಪೌಷ್ಠಿಕಾಂಶದ ಬಗ್ಗೆ ಆಪ್ತ ಸಮಲೋಚನೆಯನ್ನು ಕೈಗೊಳ್ಳುವುದು ಮತ್ತು ಆಯುಷ್ ಕೇಂದ್ರದಲ್ಲಿ ನಿಯಮಿತವಾಗಿ ಗರ್ಭಿಣಿಯರು ತಪಾಸಣೆ ಮತ್ತು ಲಸಿಕೆಯನ್ನು ನೀಡಬೇಕು. ಕೇಂದ್ರ ಸರ್ಕಾರದಿಂದ ಗರ್ಭಿಣಿ ಮಹಿಳೆಯರಿಗೆ ಮೊಬೈಲ್ ಮೂಲಕ ಶಿಕ್ಷಣ ನೀಡುವ ನಿಟ್ಟಿನಲ್ಲಿ ಈಚೆಗೆ ಕಿಲ್ಕಾರಿ ಅಭಿಯಾನವನ್ನು ಆರಂಭಿಸಲಾಗಿದೆ. ಗರ್ಭಿಣಿ ಮಹಿಳೆಯರನ್ನು ಕಿಲ್ಕಾರಿ ಆಪ್ ಮೂಲಕ ನೊಂದಾಯಿಸಿ ಪ್ರತಿ ಗರ್ಭಿಣಿಯರ ಆರೈಕೆಗೆ ನಿಗಧಿತ ವೇಳೆಗೆ ಸಲಹೆ ಸೇರಿದಂತೆ ವೈದ್ಯಕೀಯ ಚಿಕಿತ್ಸೆಗಳ ಫಾಲೋಅಪ್ಗಳನ್ನು ನೇರವಾಗಿ ತಿಳಿಸುವ ಕೆಲಸ ಮಾಡುತ್ತಿದೆ. ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗರ್ಭಿಣಿ ಮಹಿಳೆಯರಿಗೆ ಆಪ್ನಲ್ಲಿ ನೊಂದಾಯಿಸಲು ಮಾಹಿತಿ ನೀಡಬೇಕು. ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಗರ್ಭಿಣಿಯರು ಚಿಕಿತ್ಸೆಗೆ ಬಂದಾಗ ಕಡ್ಡಾಯವಾಗಿ ಇಸಿಜಿ ಪರೀಕ್ಷೆಯನ್ನು ಮಾಡಬೇಕು ಎಂದು ಸೂಚಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಲ್.ಆರ್.ಶಂಕರ್ ಮಾತನಾಡಿ, ದಡಾರ ಮತ್ತು ರುಬೆಲ್ಲಾವು ವೈರಾಣುವಿನಿಂದ ಬರುವ ಕಾಯಿಲೆಯಾಗಿದ್ದು, ಕೆಮ್ಮು ಮತ್ತು ಸೀನುವುದರ ಮೂಲಕ ಇತರರಿಗೆ ಹರಡುತ್ತದೆ. ದಡಾರದಿಂದ ನ್ಯೂಮೋನಿಯಾ, ಅತಿಸಾರ ಭೇದಿ, ಮೆದುಳಿನ ಸೋಂಕಿನಂತಹ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆ ಇದೆ. ರುಬೆಲ್ಲಾ ರೋಗವು ಗರ್ಭಿಣಿಯರಲ್ಲಿ ಕಾಣಿಸಿಕೊಂಡಾಗ ಹುಟ್ಟುವ ಮಕ್ಕಳಲ್ಲಿ ಗ್ಲೂಕೋಮ, ಕಣ್ಣಿನ ಪೊರೆ, ಕಿವುಡುತನ, ಮೆದಳು ಜ್ವರ, ಮಾನಸಿಕ ಆಸ್ವಸ್ಥತೆ, ಬುದ್ಧಿ ಮಾಂದ್ಯತೆ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆ ಇದೆ. ಆದ್ದರಿಂದ ವಿಶೇಷ ಗಮನ ಹರಿಸಿ ವೈದ್ಯರು ಕಾಳಜಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.
ಆರ್ಸಿಹೆಚ್ ಅಧಿಕಾರಿ ಡಾ.ಜಂಬಯ್ಯ, ವೈದ್ಯರಾದ ಡಾ.ಹರಿಪ್ರಸಾದ್, ಡಾ.ಭಾಸ್ಕರ್, ಡಾ.ರಾಧಿಕಾ, ಡಾ.ಸತೀಶ್ ಚಂದ್ರ, ಡಾ.ಷಣ್ಮುಖ ನಾಯ್ಕ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ, ಸೇರಿದಂತೆ ತಾಲೂಕಿನ ಎಲ್ಲಾ ತಾಲೂಕು ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳು ಭಾಗವಹಿಸಿದ್ದರು.